ಲೋಕಸಭಾ ಚುನಾವಣೆಗೆ ಬಿಜೆಪಿ ರೆಡಿ

ಬೆಂಗಳೂರು: ಮುಂಬ ರುವ ಲೋಕಸಭೆ ಚುನಾವಣೆಗೆ ಬೇರು ಮಟ್ಟದಿಂದ ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಈ ತಿಂಗಳ 28ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ವಿಧಾನಸಭಾ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿರುವ ಷಾ, ಲೋಕಸಭಾ ಚುನಾವಣೆಗೂ ಹೊಸ ತಂತ್ರಗಳನ್ನು ರೂಪಿಸುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಪಕ್ಷದ ಸ್ಥಿತಿಗತಿ, ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರದ ವೈಫಲ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕಾರ್ಯಸೂಚಿಯನ್ನು ನೀಡುವ ಸಾಧ್ಯತೆ ಇದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಕನಿಷ್ಟ 20 ಅನ್ನು ಗೆಲ್ಲಲೇಬೇಕೆಂಬ ಪಣ ತೊಟ್ಟಿರುವ ಅಮಿತ್ ಷಾ, ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸ್ಥಳೀಯ ನಾಯಕರಿಂದ ಮಾಹಿತಿ ಪಡೆಯಲಿದ್ದಾರೆ.

ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ಪಕ್ಷದ ನಿಯಮಕ್ಕೆ ಸಂಬಂಧಿಸಿದಂತೆ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಬೇಕೇ ಬೇಡವೇ ಎಂಬುದು ಷಾ ಅವರ ರಾಜ್ಯ ಭೇಟಿ ಸಂದರ್ಭದಲ್ಲಿ ತೀರ್ಮಾನವಾಗಲಿದೆ. ಯಡಿಯೂರಪ್ಪ ವಿಧಾನಸಭೆಯ ಪ್ರತಿಪಕ್ಷದ ನಾಯಕನಾಗಿದ್ದು, ರಾಜ್ಯಾಧ್ಯಕ್ಷ ಸ್ಥಾನವನ್ನು ಬೇರೊಬ್ಬರಿಗೆ ನೀಡಬೇಕೆಂಬ ಮಾತು ಪಕ್ಷದ ವಲಯದಲ್ಲಿ ಕೇಳಿಬಂದಿತ್ತು. ಮೂಲ ಗಳ ಪ್ರಕಾರ ಲೋಕಸಭಾ ಚುನಾವಣೆವರೆಗೂ ಯಡಿಯೂರಪ್ಪ ಅವರನ್ನೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಸಲು ಪಕ್ಷದ ಕೇಂದ್ರ ನಾಯಕರು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.