ಡಿಸಿ, ಸಿಇಓಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಹತ್ವದ ಸೂಚನೆ
ಮೈಸೂರು

ಡಿಸಿ, ಸಿಇಓಗಳಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಹತ್ವದ ಸೂಚನೆ

July 31, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸೋಮವಾರ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ, ನೀಡಿದ ಮಹತ್ವದ ಸೂಚನೆಗಳಿವು.

  • ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಎನ್‍ಡಿಆರ್‍ಎಫ್ ಮಾರ್ಗಸೂಚಿಗಳನ್ವಯ ಪರಿಹಾರ ಕ್ರಮ ಕೈಗೊಳ್ಳಬೇಕು.
  • ಕುಡಿಯುವ ನೀರಿಗೆ ಸಮಸ್ಯೆ ಇರುವ ಸ್ಥಳಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗಾಗಿ ಪರ್ಯಾಯ ಯೋಜನೆ ಬಗ್ಗೆ ಪರಿಶೀಲಿಸಿ, ಪ್ರಸ್ತಾವನೆ ಸಲ್ಲಿಸಬೇಕು.
  • ರಾಜ್ಯದ 12 ಮಳೆ ಕೊರತೆ ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಎದುರಾದರೆ ಕೈಗೊಳ್ಳಬೇಕಾದ ಪರಿಹಾರ ಕ್ರಮಗಳಿಗೆ ಯೋಜನೆ ರೂಪಿಸಬೇಕು.
  • ಸರ್ಕಾರ ರೈತ ಪರವಾಗಿದ್ದರೂ ಆತ್ಮಹತ್ಯೆ ಪ್ರಕರಣಗಳು ನಡೆಯಲು ಕಾರಣವೇನು ಎಂಬುದರ ಬಗ್ಗೆ ಮಾಹಿತಿ ನೀಡಬೇಕು.
  • ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಪರಿಹಾರ ನೀಡುವಾಗ ವಿಧಿ ವಿಜ್ಞಾನ ಪ್ರಯೋಗಾಲಯ ವರದಿ ವಿಳಂಬವಾಗುತ್ತಿದ್ದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ತೀರ್ಮಾನ ಕೈಗೊಂಡು, ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಶೀಘ್ರವೇ ವರದಿ ತರಿಸಿಕೊಂಡು ಪರಿಹಾರ ವಿತರಿಸಬೇಕು.
  • ರಾಜ್ಯದಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಡಿ 67 ಲಕ್ಷಕ್ಕೂ ಹೆಚ್ಚು ಜನ ಪಿಂಚಣಿ ಪಡೆಯುತ್ತಿದ್ದು, ನೇರವಾಗಿ ಫಲಾನುಭವಿಗಳ ಖಾತೆಗೆ ಪಿಂಚಣಿ ಜಮೆ ಮಾಡಲು ಇರುವ ತಾಂತ್ರಿಕ ಅಡಚಣೆಗಳನ್ನು ಕೂಡಲೇ ನಿವಾರಿಸಿ, ಆಧಾರ್ ಲಿಂಕ್ ಮಾಡಿ, 3 ತಿಂಗಳೊಳಗೆ ಸಮಸ್ಯೆ ಬಗೆಹರಿಸಬೇಕು.
  • ಪರಿಶಿಷ್ಟ ಜಾತಿ/ ಪಂಗಡದವರಿಗೆ ಆದ್ಯತೆ ಮೇರೆಗೆ ಎಲ್ಲಾ ಗ್ರಾಮಗಳಲ್ಲೂ ಸ್ಮಶಾನ ಸೌಲಭ್ಯ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕು.
  • 94 ಸಿ ಮತ್ತು 94 ಸಿಸಿ ಪ್ರಕರಣಗಳ ಹಕ್ಕು ಪತ್ರಗಳೊಂದಿಗೆ ಖಾತಾವನ್ನೂ ವಿತರಿಸುವುದು ಕಡ್ಡಾಯ. ಇದಕ್ಕಾಗಿ ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಬಾರದು.
  • ಅರಣ್ಯ ಹಕ್ಕು ಕಾಯಿದೆಯಡಿ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸುವ ನಿಟ್ಟಿನಲ್ಲಿ ಕಾಯಿದೆ ತಿದ್ದುಪಡಿಗಾಗಿ ಸಮಾಜ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಬೇಕು.
  • ಪೋಡಿ ಪ್ರಕರಣಗಳ ವಿಲೇವಾರಿಗೆ ಸರ್ವೇಯರುಗಳ ಕೊರತೆ ನೀಗಿಸಲು ಕ್ರಮ ಕೈಗೊಳ್ಳಬೇಕು.
  • ಬೆಳೆ ಸಮೀಕ್ಷೆ ಕುರಿತು ಮೊಬೈಲ್ ಆಪ್‍ನಲ್ಲಿ ತಾವು ಬೆಳೆದ ಮಾಹಿತಿಯನ್ನು ಅಪ್‍ಲೋಡ್ ಮಾಡುವಂತೆ ರೈತರನ್ನು ಪ್ರೋತ್ಸಾಹಿಸಬೇಕು.
  • ಮಂಡ್ಯ, ರಾಮನಗರ, ಬೆಳಗಾವಿ ಜಿಲ್ಲೆಗಳಲ್ಲಿ ಕಂದಾಯ ಅದಾಲತ್‍ನಲ್ಲಿ ಸ್ವೀಕರಿಸಲಾಗಿರುವ ಅರ್ಜಿಗಳ ಪೈಕಿ, ವಿಲೇವಾರಿಯಾಗದೆ ಬಾಕಿ ಇರುವ ಅರ್ಜಿಗಳನ್ನು ತಿಂಗಳೊಳಗೆ ವಿಲೇವಾರಿ ಮಾಡಬೇಕು.
  • ಚಾಮರಾಜನಗರ, ಬೆಂಗಳೂರು ನಗರ, ಬೆಳಗಾವಿ ಜಿಲ್ಲೆಗಳಲ್ಲಿ ಬಾಕಿ ಇರುವ ಪಿಂಚಣಿ ಅದಾಲತ್ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು.
  • ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿನಿಲಯಗಳ ನಿವೇಶನಗಳ ಮಂಜೂರಾತಿಗೆ ಸಂಬಂಧಿಸಿದಂತೆ, ಬಾಕಿ ಪ್ರಕರಣಗಳನ್ನು ಶೀಘ್ರ ವಿಲೇವಾರಿ ಮಾಡಿ, ಆದ್ಯತೆ ಮೇರೆಗೆ ಕ್ರಮ ಕೈಗೊಳ್ಳಬೇಕು.
  • ಕಂದಾಯ ಗ್ರಾಮಗಳ ರಚನೆಯ ಪ್ರಕ್ರಿಯೆಯನ್ನು ಆರು ತಿಂಗಳಲ್ಲಿ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಸಕ್ರಿಯರಾಗಬೇಕು.
  • ಕರ್ನಾಟಕ ಭೂ ಸುಧಾರಣೆ ಕಾಯ್ದೆಯ ಕಲಂ 79 ಎ , 79 ಬಿ ಗಳಿಗೆ ಸುಧಾರಣೆ ಅಥವಾ ಬದಲಾಯಿಸುವ ಸಂದರ್ಭದಲ್ಲಿ ನಿಜವಾದ ಭೂ ಮಾಲೀಕರಿಗೆ ತೊಂದರೆಯಾಗದಂತೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಬೇಕು.
  • 14 ತಾಲೂಕುಗಳಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು.
  • ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ನಿಗದಿಪಡಿಸಿರುವ ಅನುದಾನದ ಪೈಕಿ 30.22 ಕೋಟಿ ರೂ.ಗಳ ಬಿಡುಗಡೆ ಮಾಡಿದ್ದು, ತ್ವರಿತ ಪ್ರಗತಿ ಸಾಧಿಸಬೇಕು.
  • ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ರಾಜ್ಯವು ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಿಸಲು 10 ಜಿಲ್ಲೆಗಳು ಬಾಕಿ ಉಳಿದಿದ್ದು, ಅಕ್ಟೋಬರ್ 02ರೊಳಗೆ ಎಲ್ಲ ಜಿಲ್ಲೆಗಳಲ್ಲಿ ನಿಗದಿತ ಶೌಚಾಲಯ ನಿರ್ಮಾಣ ಕಾರ್ಯವನ್ನು ಮುಕ್ತಾಯಗೊಳಿಸಬೇಕೆಂದು ಸೂಚಿಸಿ, ಬಳಕೆಗೂ ಉತ್ತೇಜನ ನೀಡಬೇಕು.
  •  ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಾಂಪೌಂಡ್, ಅಂಗನವಾಡಿ ಕಟ್ಟಡ ಮುಂತಾದ ಕೆಲಸಗಳನ್ನು ಕೈಗೊಳ್ಳಲು ಅವಕಾಶವಿರುವುದರಿಂದ ಮಾನವ ದಿನಗಳನ್ನು ಸೃಜಿಸಲು ಕ್ರಮ ಕೈಗೊಳ್ಳಬೇಕು.

Translate »