ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧೆಗೆ ಆಗ್ರಹ

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವಂತೆ ಮೈಸೂರು ನಗರ ಜಿಲ್ಲಾ ಕಾಂಗ್ರೆಸ್ ಸೇವಾದಳ ಯುವ ಬ್ರಿಗೇಡ್ ಅಧ್ಯಕ್ಷ ಮಜೀದ್ ಇನಾಯತ್ ಖಾನ್ ಒತ್ತಾಯಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಲೋಕಸಭಾ ಅಭ್ಯರ್ಥಿ ಗಳನ್ನು ಕಣಕ್ಕಿಳಿಸುತ್ತಿರುವ ಸಂದರ್ಭದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕು ಎಂದು ಮನವಿ ಮಾಡಿದರಲ್ಲದೆ, ಕಾಂಗ್ರೆಸ್ ನಿಂದ ಯಾರನ್ನೇ ಕಣಕ್ಕಿಳಿಸಿದರೂ ಅವರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರಲ್ಲದೆ, ಒಂದು ವೇಳೆ ಮೈತ್ರಿ ಕಾರಣದಿಂದ ಜೆಡಿಎಸ್ ಅಭ್ಯರ್ಥಿ ಹಾಕಿದಲ್ಲಿ ತಾವು ಸಹಕರಿಸು ವುದಿಲ್ಲ. ಆದರೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸ್ಪರ್ಧಿಸಿದಲ್ಲಿ ಅವರಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು. ಬ್ರಿಗೇಡ್‍ನ ಸೈಯ್ಯದ್ ಶೋಯಬ್, ಸೈಯ್ಯದ್ ಅತೀರ್, ಕುರುಬಾರಹಳ್ಳಿ ಹೇಮಂತ್, ರಾಜೇಶ್ ಮತ್ತಿತರರು ಗೋಷ್ಠಿಯಲ್ಲಿದ್ದರು.