ಅತಿವೃಷ್ಟಿಯ ನಿರಾಶ್ರಿತ ಕುಟುಂಬಗಳಿಗೆ  ಉತ್ತಮ ಬದುಕು ಕಟ್ಟಿಕೊಳ್ಳಲು ಸಹಕಾರ
ಕೊಡಗು

ಅತಿವೃಷ್ಟಿಯ ನಿರಾಶ್ರಿತ ಕುಟುಂಬಗಳಿಗೆ  ಉತ್ತಮ ಬದುಕು ಕಟ್ಟಿಕೊಳ್ಳಲು ಸಹಕಾರ

September 4, 2018

ಮಡಿಕೇರಿ: ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಥಮ ಆದ್ಯತೆಯಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಡಾ.ಜಯಮಾಲ ಅವರು ತಿಳಿಸಿದ್ದಾರೆ.

ನಗರದ ಹೋಟೆಲ್ ಒಂದರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು ಅತಿವೃಷ್ಟಿಯಿಂದಾಗಿ ಮಹಿಳೆಯರು, ಮಕ್ಕಳು ಮನೆ ಮಠ ಕಳೆದುಕೊಂಡಿದ್ದು, ಇಂತಹ ಕುಟುಂಬಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ಅತಿವೃಷ್ಟಿಯಿಂದಾಗಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ಉತ್ತಮ ಬದುಕು ಕಟ್ಟಿಕೊಳ್ಳಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರಲ್ಲದೆ, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ 30 ಅಂಗನವಾಡಿ ಕೇಂದ್ರಗಳು ಸಂಪೂರ್ಣ ಹಾನಿಯಾಗಿದೆ. 144 ಅಂಗನವಾಡಿ ಗಳು ಭಾಗಶಃ ಹಾನಿಯಾಗಿವೆ. 75 ಅಂಗನವಾಡಿಗಳನ್ನು ದುರಸ್ತಿ ಮಾಡಬೇಕಿದೆ ಎಂದು ಜಯಮಾಲ ತಿಳಿಸಿದರು. ಪ್ರತೀ ಅಂಗನವಾಡಿಯಲ್ಲಿ ಮಾತೃ ಪೂರ್ಣ ಯೋಜನೆ ಸಮರ್ಪಕವಾಗಿ ತಲುಪಿಸಬೇಕಿದೆ. ಅಂಗನವಾಡಿಗಳಿಗೆ ಅಡುಗೆ ಅನಿಲ ವ್ಯವಸ್ಥೆ, ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂದು ಅವರು ಹೇಳಿದರು.

ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ 69 ವಿಕಲ ಚೇತನರು, 188 ಹಿರಿಯ ನಾಗರಿಕರು ಮನೆ ಕಳೆದುಕೊಂಡಿದ್ದಾರೆ. 19 ಜನರ ಬದುಕು ಅತಂತ್ರವಾಗಿದೆ. ಇವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಜಯಮಾಲ ಅವರು ಹೇಳಿದರು. ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸಿ ಆರ್ಥಿಕ ಸಬಲೀಕರಣಕ್ಕೆ ಅವಕಾಶ ಮಾಡಬೇಕಿದೆ. ಈ ಸಂಬಂಧ ಇಲಾಖೆ ಯಿಂದ ಅನುದಾನ ಒದಗಿಸಲಾಗುವುದು. ಗರ್ಭಿಣಿ ಯರು, ಬಾಣಂತಿಯರು, ಮಕ್ಕಳಿಗೆ ಅಪೌಷ್ಠಿಕತೆ ಉಂಟಾ ಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಮಾಹಿತಿ ನೀಡಿದರು.

ಮಡಿಕೇರಿ ದಸರಾ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಮಡಿಕೇರಿ ದಸರಾಗೆ ಹಿಂದಿನಂತೆ ಅನುದಾನ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಗೂ ಮೊದಲು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಇತರರು ಇದ್ದರು.

ನಗರದ ಮೈತ್ರಿ ಭವನದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ನಿರಾಶ್ರಿತರೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳ ಯೋಗ ಕ್ಷೇಮ ವಿಚಾರಿಸಿ ಮಾತ ನಾಡಿದ ಸಚಿವರು ಅತಿವೃಷ್ಟಿಯಿಂದ ಮನೆ ಕಳೆದು ಕೊಂಡ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡಲು ಬಹಳಷ್ಟು ಜನ ದಾನಿಗಳು ಮುಂದೆ ಬಂದಿದ್ದು, ಸರ್ಕಾರವು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಪರಿಹಾರ ಕೇಂದ್ರದಲ್ಲಿರುವ ಮಕ್ಕಳಿಗೆ ಈಗಾಗಲೇ ಶಾಲೆಗಳನ್ನು ಆರಂಭಿಸಿದ್ದು, ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಂಡಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಿರುವುದಾಗಿ ತಿಳಿಸುತ್ತಾ ಪರಿಹಾರ ಕೇಂದ್ರದಲ್ಲಿರುವ ನಿರಾಶ್ರಿತರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿರುವುದಾಗಿ ನುಡಿದರು. ಅತಿವೃಷ್ಟಿಯಿಂದ ನಿರಾಶ್ರಿತರಾಗಿರುವವರ ನೆರವಿಗೆ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲಿದ್ದು, ಯಾರು ಕೂಡ ಚಿಂತಿಸುವ ಅಗತ್ಯವಿಲ್ಲ ಎಂದು ಸಚಿವರು ಧೈರ್ಯ ತುಂಬಿದರು.

Translate »