ಸಂಸತ್ ಭವನ ಉದ್ಘಾಟನೆಗೆ  ಹೋಗುತ್ತೇನೆ; ಹೋಗದೆ ಇರುವುದಕ್ಕೆ  ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ…!
News

ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ; ಹೋಗದೆ ಇರುವುದಕ್ಕೆ ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ…!

May 26, 2023

ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಮಂತ್ರಿಗಳು, ಅದು ಯಾರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ಎಂದರು. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು.

ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ, ದೇಶದ ಪ್ರಜೆ ಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ಬಿಜೆಪಿಯನ್ನು ರಾಜಕೀಯ ವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣ ಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯ ದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾ ಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರಲಾರೆ ಎಂದು ಮಾಜಿ ಪ್ರಧಾನಿ ಗಳು ಸ್ಪಷ್ಟಪಡಿಸಿದರು. ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ ಇಲ್ಲವಾ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹೌದು, ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.

ಪಕ್ಷವನ್ನು ಉಳಿಸುತ್ತೇನೆ: ಪಕ್ಷಕ್ಕಾಗಿ ನನ್ನ ಜೀವ ಸವೆಸಿ ದ್ದೇನೆ. ನಾನು ಇರುವಷ್ಟು ಕಾಲವೂ ಪಕ್ಷ ಕ್ಕಾಗಿಯೇ ಬದುಕುತ್ತೇನೆ. ನನ್ನ ಕೊನೆ ಉಸಿರು ಇರುವ ತನಕ ನಾನು ಪಕ್ಷಕ್ಕೇ ಮೀಸಲು ಎಂದು ಗೌಡರು ಭಾವುಕರಾಗಿ ನುಡಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸೋತಿದೆ ಎಂಬುದಕ್ಕೆ ನನಗೆ ಬಹಳ ನೋವಿದೆ. ಅದೇ ನೋವಿನಿಂದ ಕಾಲ ದೂಡಲು ಸಾಧ್ಯವೇ? ಪುಟಿದೆದ್ದು ಪಕ್ಷ ಕಟ್ಟಬೇಕು, ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದರು.

ಸೋತಿದ್ದಕ್ಕೆ ಪ್ರಾಮಾಣಿಕವಾಗಿ ಕಾರಣಗಳನ್ನು ಹುಡು ಕೋಣ. ಅವುಗಳಿಗೆ ಪರಿಹಾರಗಳನ್ನು ಕಂಡು ಹಿಡಿಯೋಣ. 1989ರಲ್ಲಿ ನಮ್ಮ ಪಕ್ಷ ಕೇವಲ ಎರಡು ಕ್ಷೇತ್ರಗಳಲ್ಲಿ ಮಾತ್ರ ಗೆದ್ದಿತ್ತು. ಅದಾದ ಮೇಲೆ ಐದು ವರ್ಷಗಳ ನಂತರ ನಮ್ಮ ಪಕ್ಷ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂತು. ನಾನೇ ಮುಖ್ಯಮಂತ್ರಿ ಆದೆ. ಆಮೇಲೆ ಪ್ರಧಾನಿಯೂ ಆದೆ. ಜನರ ಆಶೀರ್ವಾದದಿಂದ ಅದು ಸಾಧ್ಯವಾಯಿತು. ಸೋತಾಗ ನಿರಾಶೆ, ನೋವು ಸಹಜ. ನಾನು ಈ ಎಲ್ಲಾ ಹಂತಗಳನ್ನು ದಾಟಿಕೊಂಡು ಮುಂದೆ ಬಂದಿದ್ದೇನೆ. ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಈ ಪಕ್ಷವನ್ನು ಉಳಿಸುವ ಕೆಲಸ ನಾನು ಮಾಡಿಯೇ ಮಾಡುತ್ತೇನೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ತಾಲೂಕು, ಜಿಲ್ಲಾ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.

Translate »