ಅರಣ್ಯ ಹುತಾತ್ಮರ ದಿನಾಚರಣೆ

ಮಡಿಕೇರಿ:  ಅರಣ್ಯ ಇಲಾಖೆ ವತಿಯಿಂದ ನಗರದ ಅರಣ್ಯ ಭವನದಲ್ಲಿ ಮಂಗಳವಾರ ‘ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ’ ನಡೆಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವಿ.ವಿ.ಮಲ್ಲಾಪುರ, ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜ, ಸರ್ಕಾರಿ ಅಭಿಯೋಜಕರಾದ ಶ್ರೀಧರ ನಾಯರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎಂ.ಎನ್. ಮಂಜುನಾಥ್, ಮರಿಯ ಕ್ರಿಸ್ತರಾಜು, ಎಂ.ಎಂ.ಜಯ, ಎಂ.ಜೆ.ಗೋವರ್ಧನ್ ಸಿಂಗ್ ಹೀಗೆ ಹಲವರು ಅರಣ್ಯ ಹುತಾತ್ಮರಿಗೆ ಪುಷ್ಪಗುಚ್ಛವಿಟ್ಟು ಗೌರವ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್ ಅವರು ಪರಿಸರ ಮತ್ತು ವನ್ಯಜೀವಿಯನ್ನು ಸಂರಕ್ಷಣೆ ಮಾಡುವುದು ಎಲ್ಲರ ಹೊಣೆಯಾಗಿದೆ ಎಂದು ಅವರು ಹೇಳಿದರು. ಅರಣ್ಯ ಸಂರಕ್ಷಣೆ ಸಂದರ್ಭದಲ್ಲಿ ಹುತಾತ್ಮರಾದವರ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಒದಗಿಸುವಂತಾಗಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ಲಿಂಗರಾಜ ಅವರು ಮಾತನಾಡಿ ಅರಣ್ಯ ಮತ್ತು ಪರಿಸರ ಮಾನವನ ಅವಿಭಾಜ್ಯ ಅಂಗವಾಗಿದ್ದು, ಅರಣ್ಯ ಮತ್ತು ವನ್ಯ ಜೀವಿಗಳನ್ನು ಸಂರಕ್ಷಣೆ ಮಾಡಬೇಕಿದೆ ಎಂದರು.