ಕನಿಷ್ಠ ವೇತನಕ್ಕೆ ಆಗ್ರಹಿಸಿ ಗ್ರಾಪಂ ನೌಕರರ ಪ್ರತಿಭಟನೆ

ಹಾಸನ: ಗ್ರಾಪಂ ನೌಕರರಿಗೆ ಕನಿಷ್ಠ ವೇತನ ನೀಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಗ್ರಾಪಂ ನೌಕರರ ಸಂಘದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಬಿ.ಎಂ ರಸ್ತೆ ಮೂಲಕ ಜಿಲ್ಲಾ ಪಂಚಾಯತ್ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಗ್ರಾಮ ಪಂಚಾಯಿತಿ ನೌಕರರಿಗೆ ಹಲವು ತಿಂಗಳಿಂದ ಮಾಸಿಕ ವೇತನ ನೀಡದ ಪರಿಣಾಮ ತೀವ್ರ ತೊಂದರೆ ಅನುಭವಿಸುವಂತಾಗಿದೆ. ಗ್ರಾಮ ಪಂಚಾಯಿತಿ ನೌಕರರಿಗೆ ಸರ್ಕಾರದಿಂದಲೇ ವೇತನ ನೀಡುವ ಭರವಸೆ ನೀಡಿದ್ದು, ಕೂಡಲೇ ಸರ್ಕಾರದಿಂದ ವೇತನ ಜಾರಿಗೆ ಕ್ರಮ ಕೈಗೊಳ್ಳ ಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಿಐಟಿಯು ಸಂಘಟನೆ ಜಿಲ್ಲಾಧ್ಯಕ್ಷ ಧರ್ಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೇಗೌಡ, ರಾಘವೇಂದ್ರ, ಉಪಾಧ್ಯಕ್ಷ ಕರಿಯಪ್ಪ, ಖಜಾಂಚಿ ಕುಮಾರಸ್ವಾಮಿ, ಅಶೋಕ್ ಇತರರಿದ್ದರು.