ಲಾಕ್‍ಡೌನ್ ಅವಧಿ ವೇತನ ಪಾವತಿ, ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
ಮೈಸೂರು

ಲಾಕ್‍ಡೌನ್ ಅವಧಿ ವೇತನ ಪಾವತಿ, ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ

August 5, 2020

ಮೈಸೂರು,ಆ.4(ಪಿಎಂ)-ಲಾಕ್‍ಡೌನ್ ಅವಧಿಯ ಗೌರವಧನ ಪಾವತಿ ಮಾಡಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯ ಜಿಲ್ಲಾ ಸಮಿತಿ ಆಶ್ರಯದಲ್ಲಿ ಅತಿಥಿ ಉಪ ನ್ಯಾಸಕರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾ ಯಿಸಿದ ಪ್ರತಿಭಟನಾಕಾರರು, ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,564 ಅತಿಥಿ ಉಪ ನ್ಯಾಸಕರು ಸೇವೆ ಸಲ್ಲಿಸುತ್ತಿದ್ದೇವೆ. ಲಾಕ್‍ಡೌನ್ ಅವ ಧಿಯ ವೇತನವಿಲ್ಲದೆ ಹಾಗೂ ಉದ್ಯೋಗವೂ ಇಲ್ಲದೇ ತೀವ್ರ ಸಂಕಷ್ಟಕ್ಕೆ ಸಿಲುಕಿ ನರಕಯಾತನೆಯ ಬದುಕು ಮಾಡುವಂತಾಗಿದೆ ಎಂದು ಅಳಲು ತೋಡಿಕೊಂಡರು.

ನಮ್ಮ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತರುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜುಲೈ ನಲ್ಲಿ ಪ್ರತಿ ಮಂಗಳವಾರ ಪ್ರತಿಭಟನೆ ನಡೆಸುತ್ತಿದ್ದೇವೆ. ಅದೇ ರೀತಿ ಇಂದು ಮೈಸೂರಿನಲ್ಲೂ 5ನೇ ಮಂಗಳ ವಾರ ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಈವರೆಗೆ ಸರ್ಕಾರ ನಮ್ಮ ಸಂಕಷ್ಟ ಕೇಳಲು ಯಾರೂ ಮುಂದಾ ಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

10ರಿಂದ 20 ವರ್ಷಗಳು ಸೇವೆ ಸಲ್ಲಿಸಿದರೂ ಸೇವಾ ಭದ್ರತೆ ಇಲ್ಲದೆ ಹುಸಿ ಭರವಸೆ ಮೂಲಕ ನಮ್ಮನ್ನು ವಂಚಿಸಲಾಗುತ್ತಿದೆ. ಸರ್ಕಾರದ ನಿಯಮಾನುಸಾರ ಆಯ್ಕೆಗೊಂಡು ಸೇವಾ ಭದ್ರತೆ, ಕನಿಷ್ಠ ವೇತನ, ವೈದ್ಯಕೀಯ ಸೌಲಭ್ಯ ಇಲ್ಲದೆ ದುಡಿಯುತ್ತಿರುವ ಅತಿಥಿ ಉಪನ್ಯಾಸಕರನ್ನು ಬೇಕಾದಾಗ ಬಳಸಿಕೊಂಡು ಉಂಡ ಎಲೆ ಬಿಸಾಡಿದಂತೆ ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲಾಕ್‍ಡೌನ್ ಅವಧಿಯಲ್ಲಿ ಜೀವನ ಭದ್ರತೆ ಇಲ್ಲದೆ ಅನೇಕ ಅತಿಥಿ ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಇಷ್ಟಾದರೂ ನಮ್ಮ ಸಂಕಷ್ಟ ಆಲಿಸುತ್ತಿಲ್ಲ. 5 ತಿಂಗಳಿಂದ ಗೌರವಧನ ಬಿಡುಗಡೆ ಮಾಡದೇ ಇರುವುದು ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಂಬಂಧ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕಲ್ಪಿಸಲು ಸೇವೆಯಲ್ಲಿ ವಿಲೀನಗೊಳಿಸ ಬೇಕು ಎಂದು ಒತ್ತಾಯಿಸಿದರು. ಗುತ್ತಿಗೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯಕೀಯ ಸಿಬ್ಬಂದಿಯನ್ನು ನೇಮ ಕಾತಿ ಮಾಡಿದಂತೆ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳಲು ಶೀಘ್ರವೇ ಕ್ರಮ ವಹಿಸ ಬೇಕು. ತಕ್ಷಣ ಲಾಕ್‍ಡೌನ್ ಅವಧಿಯ ಗೌರವಧನ ಬಿಡುಗಡೆ ಮಾಡಬೇಕು. ಪಿಎಫ್ ಹಾಗೂ ವೈದ್ಯಕೀಯ ಸೌಲಭ್ಯ ಒದಗಿಸಬೇಕು. ಆತ್ಮಹತ್ಯೆ ಮಾಡಿಕೊಂಡ ಹಾಗೂ ಅನಾರೋಗ್ಯದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಸಂಘಟನೆಯ ಜಿಲ್ಲಾ ಸಮಿತಿ ಉಪಾಧ್ಯಕ್ಷ ಡಾ.ಎನ್. ಮಹೇಶ್, ಪ್ರಧಾನ ಕಾರ್ಯದರ್ಶಿ ಹನುಮಂತೇಶ್, ಸಂಘಟನಾ ಕಾರ್ಯದರ್ಶಿ ಡಾ.ಬಾಬುರಾಜ್, ಅತಿಥಿ ಉಪನ್ಯಾಸಕ ಡಾ.ಗೋಪಾಲ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Translate »