ಕೊಳಚೆ ಪ್ರದೇಶ ನಿವಾಸಿಗಳಿಗೆ ಆರು ತಿಂಗಳಲ್ಲಿ ಖಾಯಂ ಹಕ್ಕುಪತ್ರ ವಿತರಣೆ ವಸತಿ ಸಚಿವ ವಿ.ಸೋಮಣ್ಣ ಘೋಷಣೆ
ಮೈಸೂರು

ಕೊಳಚೆ ಪ್ರದೇಶ ನಿವಾಸಿಗಳಿಗೆ ಆರು ತಿಂಗಳಲ್ಲಿ ಖಾಯಂ ಹಕ್ಕುಪತ್ರ ವಿತರಣೆ ವಸತಿ ಸಚಿವ ವಿ.ಸೋಮಣ್ಣ ಘೋಷಣೆ

February 2, 2021

ಬೆಂಗಳೂರು,ಫೆ.1(ಕೆಎಂಶಿ)-ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಮಾಲೀಕತ್ವದ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಆರು ತಿಂಗಳಲ್ಲಿ ಖಾಯಂ ಹಕ್ಕುಪತ್ರ ವಿತರಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಸದಸ್ಯ ಜಮೀರ್ ಅಹಮ್ಮದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಕೊಳಗೇರಿ ಅಭಿವೃದ್ಧಿ ನಿಗಮದ ಮೂಲಕ ಈ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗಿದೆ, ಶೀಘ್ರದಲ್ಲೇ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದರು. ಬಿಬಿಎಂಪಿ ವ್ಯಾಪ್ತಿಯಲ್ಲಿ 600 ಚದರ ಅಡಿ, ನಗರಸಭೆ ವ್ಯಾಪ್ತಿಯಲ್ಲಿ 600 ಚದರ ಅಡಿ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 1200 ಚದರ ಅಡಿಗೆ ಮೀರದಂತೆ ಅಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗುವುದು. ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 1200 ಚದರ ಅಡಿಗಳಲ್ಲಿನ ನಿವೇಶನಕ್ಕೆ ಸಾಮಾನ್ಯ ವರ್ಗದವರಿಗೆ 3000 ರೂ., ಎಸ್ಟಿ-ಎಸ್ಟಿ ವರ್ಗದವರಿಗೆ 1200 ರೂ., ನಗರಸಭೆ ವ್ಯಾಪ್ತಿಯಲ್ಲಿನ 600 ಚದರ ಅಡಿ ನಿವೇಶನಕ್ಕೆ ಸಾಮಾನ್ಯ ವರ್ಗದವರಿಗೆ 4 ಸಾವಿರ, ಎಸ್ಟಿ-ಎಸ್ಟಿ ವರ್ಗದವರಿಗೆ 2000 ರೂ. ನಿಗದಿ ಮಾಡಲಾಗಿದೆ. ಬಿಬಿಎಂಪಿ ಹಾಗೂ ನಗರ ಪಾಲಿಕೆ ವ್ಯಾಪ್ತಿಯಲ್ಲಿ 600 ಚದರ ಅಡಿಗಳ ನಿವೇಶನದ ನೋಂದಣಿಗೆ ಸಾಮಾನ್ಯ ವರ್ಗದವರಿಗೆ 10 ಸಾವಿರ, ಎಸ್ಸಿ-ಎಸ್ಟಿ ವರ್ಗದವರಿಗೆ 5000 ರೂ. ನಿಗದಿ ಮಾಡಲಾಗಿದೆ ಎಂದರು.

Translate »