ಕಬ್ಬು ದರ ನಿಗದಿ ಕುರಿತು ನಾಳೆ ಸಿಎಂಗೆ ಒತ್ತಾಯ ಪತ್ರ
ಮೈಸೂರು

ಕಬ್ಬು ದರ ನಿಗದಿ ಕುರಿತು ನಾಳೆ ಸಿಎಂಗೆ ಒತ್ತಾಯ ಪತ್ರ

November 23, 2020

ಮೈಸೂರು,ನ.22(ಆರ್‍ಕೆಬಿ)- ಕಬ್ಬು ದರ ನಿಗದಿ, ರೈತರ ಸಮಸ್ಯೆಗಳ ಬಗ್ಗೆ ಗಮನ ಸೆಳೆಯಲು ನ.24ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಒತ್ತಾಯ ಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಕಳೆದ 2 ತಿಂಗಳಿಂದ ಕಬ್ಬು ಬೆಳೆಗಾರರು ನಿರಂತರ ಹೋರಾಟ ನಡೆಸುತ್ತಾ ಸರ್ಕಾರದ ಗಮನ ಸೆಳೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ನಿಗದಿ ಮಾಡಿರುವ ಕಬ್ಬಿನ ಎಫ್‍ಆರ್‍ಪಿ ದರ ರೈತರಿಗೆ ನಷ್ಟ ಉಂಟು ಮಾಡುತ್ತಿದೆ. ಸಕ್ಕರೆ ಇಳುವರಿಯಲ್ಲಿ ಕಾರ್ಖಾನೆಗಳು ರೈತರಿಗೆ ಮೋಸ ಮಾಡುತ್ತಿವೆ. ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಸ್ಥಳೀಯ ರೈತರ ಕಬ್ಬನ್ನು 15 ತಿಂಗಳಾದರೂ ಕಟಾವು ಮಾಡದೆ ಹೊರ ಜಿಲ್ಲೆಯಿಂದ ಕಬ್ಬು ತಂದು ನುರಿಸುತ್ತಿದೆ. ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯು ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿದ್ದರೂ ಜಿಲ್ಲಾಡಳಿತ ಗಂಭೀರ ಕ್ರಮ ಕೈಗೊಳ್ಳುತ್ತಿಲ್ಲ. ಕಬ್ಬಿನ ಎಫ್‍ಆರ್‍ಪಿ ದರವನ್ನು ರೈತರ ಹೊಲದ ದರ ಎಂದು ನಿಗದಿಪಡಿಸಬೇಕು. ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ರೈತರ ಹೊಲದಲ್ಲಿಯೇ ಕೃಷಿ ಉತ್ಪನ್ನಗಳ ಖರೀದಿ ಮಾಡುವ ವ್ಯವಸ್ಥೆ ಜಾರಿ ಮಾಡಿರುವ ಸರ್ಕಾರ ಕಬ್ಬಿಗೂ ಅನ್ವಯಿಸುವಂತೆ ಕ್ರಮ ಕೈಗೊಳ್ಳಬೇಕು. ಸಕ್ಕರೆ ಸಚಿವರು ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಭತ್ತದ ಬೆಂಬಲ ಬೆಲೆಗೆ ಪೆÇ್ರೀತ್ಸಾಹ ಧನ ಹೆಚ್ಚುವರಿಯಾಗಿ ಕ್ವಿಂಟಾಲ್‍ಗೆ 200 ರೂ. ನೀಡಬೇಕು ಎಂದು ಒತ್ತಾಯಿಸಲು ಮುಖ್ಯಮಂತ್ರಿಗಳ ಗಮನ ಸೆಳೆಯಲು ನಿರ್ಧರಿಸಿರುವುದಾಗಿ ಅವರು ತಿಳಿಸಿದ್ದಾರೆ.

Translate »