ಗ್ರಾಮಗಳ ಅಭಿವೃದ್ಧಿಗೆ ನರೇಗಾ ಅನುಕೂಲ

ಮಲ್ಕುಂಡಿ, ಜು.12(ಚನ್ನಪ್ಪ)- ಗ್ರಾಮಗಳ ಅಭಿವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆ ಅನುಕೂಲವಾಗಲಿದೆ ಎಂದು ಶಾಸಕ ಬಿ.ಹರ್ಷವರ್ಧನ್ ಹೇಳಿದರು.

ಹುರ ಗ್ರಾಮದಲ್ಲಿ ನರೇಗಾ ಯೋಜನೆ ಯಡಿ 28 ಲಕ್ಷ ರೂ. ವೆಚ್ಚದ ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗ್ರಾಪಂ ಮಟ್ಟದಲ್ಲಿ ಗ್ರಾಮಗಳ ಅಭಿವೃದ್ಧಿಗೆ ಗ್ರಾಪಂ ಆಡಳಿತ ಮಂಡಳಿ ಒಗ್ಗಟ್ಟಿನಿಂದ ಶ್ರಮಿಸಿದಾಗ ಗ್ರಾಮ ಗಳು ಅಭಿವೃದ್ಧಿ ಕಾಣಲು ಸಾಧ್ಯ. ಮುಂಬರುವ ಜಿಪಂ, ತಾಪಂ ಚುನಾವಣೆ ಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ. ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಒಗ್ಗಟ್ಟಿನಿಂದ ಶ್ರಮಿಸಿ ಎಂದರು.

ಗ್ರಾಪಂ ಅಧ್ಯಕ್ಷ ಚಂದ್ರು ಮಾತನಾಡಿ, ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಪಕ್ಷಭೇದ ಮರೆತು ಹಗಲಿರುಳು ದುಡಿಯುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಸಕ ಬಿ.ಹರ್ಷವರ್ಧನ್ ಅವರಿಗೆ ಮುಂದಿನ ಸಂಪುಟ ರಚನೆಯಲ್ಲಿ ಸಚಿವ ಸ್ಥಾನ ನೀಡಿದರೆ ಹೆಚ್ಚಿನ ಅಭಿವೃದ್ಧಿ ಕಾಣಲಿದೆ ಎಂದರು.

ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ಮಹೇಶ್, ರಾಜ್ಯ ಕಾರ್ಯಕಾರಣಿ ಸದಸ್ಯ ಸುಬ್ಬಣ್ಣ, ತಾಪಂ ಮಾಜಿ ಅಧ್ಯಕ್ಷ ಬಿ.ಎಸ್. ಮಹದೇವಪ್ಪ, ಮುಖಂಡರಾದ ಹೆಚ್.ಎಂ. ಕೆಂಡಗಣ್ಣಪ್ಪ, ಎಂ ಪುಟ್ಟಸ್ವಾಮಿ, ಎಂ.ವಿ. ಬಸವರಾಜಪ್ಪ, ಬಸಪ್ಪ, ಅಬ್ದುಲ್ ರಜಾಕ್, ಶಂಕರ್, ಪಿಡಿಓ ಮಹೇಶ್ ಕುಮಾರ್, ಗ್ರಾಪಂ ಸದಸ್ಯರಾದ ರಾಜೇಶ್ವರಿ, ಜಯಲಕ್ಷ್ಮಿ, ಶಿವಕುಮಾರ್ ಮತ್ತಿತರರಿದ್ದರು.