ಶ್ರೀವೈರಮುಡಿ ಮಹೋತ್ಸವಕ್ಕೆ ಅಗತ್ಯ ಸಿದ್ಧತೆಗೆ ಸೂಚನೆ

ಮಂಡ್ಯ,ಮಾ.11(ನಾಗಯ್ಯ)-ಮೇಲು ಕೋಟೆಯಲ್ಲಿ ಏಪ್ರಿಲ್ 2 ರಂದು ನಡೆ ಯಲಿರುವ ಚಲುವನಾರಾಯಣಸ್ವಾಮಿ ದೇವರ ಶ್ರೀವೈರಮುಡಿ ಕಿರೀಟ ಧಾರಣಾ ಮಹೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತ ವಾಗಿ ಮಾಡಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಇಂದು ಮೇಲುಕೋಟೆ ಪ್ರವಾಸಿ ಮಂದಿ ರದಲ್ಲಿ ನಡೆದ ಶ್ರೀ ಚಲುವನಾರಾಯಣ ಸ್ವಾಮಿ ವೈರಮುಡಿ ಕಿರೀಟಧಾರಣ ಬ್ರಹ್ಮೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವೈರಮುಡಿ ಬ್ರಹ್ಮೋತ್ಸವ ಪ್ರಯುಕ್ತ ಮೇಲುಕೋಟೆ ಶ್ರೀ ಚಲುವನಾರಾಯಣಸ್ವಾಮಿ ದೇಗುಲ ದಲ್ಲಿ ಮಾರ್ಚ್ 28 ರಿಂದ ಏಪ್ರಿಲ್ 9 ರವರೆಗೆ ನಾನಾ ಧಾರ್ಮಿಕ ಕಾರ್ಯ ಕ್ರಮಗಳು ನಡೆಯಲ್ಲಿದ್ದು, ಏಪ್ರಿಲ್ 2 ರಂದು ಶ್ರೀವೈರಮುಡಿ ಕಿರೀಟಧಾರಣ ಮಹೋತ್ಸವ ವಿಜೃಂ ಭಣೆಯಿಂದ ನಡೆಯಲಿದೆ ಎಂದು ತಿಳಿಸಿದರು.

ಶ್ರೀಕ್ಷೇತ್ರದಲ್ಲಿ ಕುಡಿ ಯುವ ನೀರು ಸರಬ ರಾಜು ಮಾಡುವುದು ಹಾಗೂ ಮೂಲ ಸೌಕರ್ಯದ ವ್ಯವಸ್ಥೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅವರು ವೈರಮುಡಿ ಉತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಶುದ್ಧವಾದ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಶಾಂತಿ ಸುವ್ಯವಸ್ಥೆ ಪಾಲನೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಸೂಚನೆ ನೀಡಿದರು.

ದೇವಾಲಯಕ್ಕೆ ವಿಶೇಷ ದೀಪಾಲಂ ಕಾರ, ವ್ಯವಸ್ಥಿತ ಸಂಚಾರ ಮತ್ತು ವಾಹನ ನಿಲುಗಡೆ ವ್ಯವಸ್ಥೆ, ಉತ್ಸವ ಪೂರ್ತಿ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆ, ಮುಖ್ಯ ರಸ್ತೆಗಳ ದುರಸ್ತಿ, ಸೂಕ್ತವಾದ ಸಾರಿಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಯಾಲಕ್ಕಿಗೌಡ, ಅಪರ ಪೆÇೀಲಿಸ್ ವರಿಷ್ಠಾಧಿಕಾರಿ ಶೋಭಾ ರಾಣಿ, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.