ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ವರ್ಚುಯಲ್ ಮೂಲಕ ಪ್ರಧಾನಿ ಚಾಲನೆ
News

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ವರ್ಚುಯಲ್ ಮೂಲಕ ಪ್ರಧಾನಿ ಚಾಲನೆ

November 17, 2022

ಬೆಂಗಳೂರು, ನ.16(ಕೆಎಂಶಿ)- ಮೂಲಸೌಲಭ್ಯ ಅಭಿವೃದ್ಧಿಗೆ ಮುಂಬ ರುವ ದಿನಗಳಲ್ಲಿ 100 ಟ್ರಿಲಿಯನ್ ಡಾಲರ್‍ನಷ್ಟು ಅಗಾಧ ಮೊತ್ತವನ್ನು ವಿನಿಯೋಗಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

25ನೇ ವರ್ಷದ ಪ್ರತಿಷ್ಠಿತ ಬೆಂಗ ಳೂರು ತಂತ್ರಜ್ಞಾನ ಶೃಂಗಸಭೆಯನ್ನು ಉದ್ದೇಶಿಸಿ ವರ್ಚುಯಲ್ ಆಗಿ ಮಾತ ನಾಡಿದ ಅವರು, ದೇಶದಲ್ಲಿ ಬಂಡ ವಾಳ ಹೂಡಿಕೆದಾರರ ಪಾಲಿಗೆ ಹಿಂದಿನ ಕೆಂಪುಪಟ್ಟಿಯ ಸಮಸ್ಯೆ ಕೊನೆಗೊಂಡಿದ್ದು, ಈಗ ರತ್ನಗಂಬಳಿಯ ಸ್ವಾಗತವಿದೆ ಎಂದರು.

ಅದರಲ್ಲೂ ಕರ್ನಾಟಕ ತಂತ್ರಜ್ಞಾನ, ನಾವೀನ್ಯತೆ ಮತ್ತು ಸಮರ್ಥ ನಾಯಕತ್ವದ ತವರಾಗಿದೆ ಎಂದು ಬಣ್ಣಿಸಿದ ಪ್ರಧಾನಿ ಗಳು, ತಂತ್ರಜ್ಞಾನಕ್ಕೆ ಮಾನವೀಯ ಮತ್ತು ಪ್ರಜಾಸತ್ತಾತ್ಮಕ ಸ್ಪರ್ಶವನ್ನು ನೀಡುತ್ತಲೇ ಇರುವುದು ಭಾರತದ ಅನನ್ಯ ಸಾಧನೆ ಯಾಗಿದೆ. ಅದರಲ್ಲೂ ತಂತ್ರಜ್ಞಾನವು ನಮಗೆ ಬಡತನದ ವಿರುದ್ಧದ ಹೋರಾಟಕ್ಕೆ ಶಕ್ತಿಶಾಲಿ ಅಸ್ತ್ರವಾಗಿದೆ ಎಂದರು.

ಹೆಲ್ತ್ ಟೆಕ್, ಫಿನ್ ಟೆಕ್, ಎಡುಟೆಕ್ ಸೇರಿದಂತೆ ಎಲ್ಲ ರಂಗಗಳನ್ನೂ ಭಾರತೀಯರು ಜಾಗತಿಕ ಮಟ್ಟದಲ್ಲಿ ಮುನ್ನಡೆಸುತ್ತಿದ್ದಾರೆ. ಯುವಶಕ್ತಿಯಿಂದ ಕೂಡಿರುವ ಸಮಕಾಲೀನ ಜಗತ್ತಿನಲ್ಲಿ ಪ್ರತಿಭೆಯ ಜಾಗತೀಕರಣ ನಡೆಯುತ್ತಿದೆ. ದೇಶದ 81 ಸಾವಿರ ನವೋದ್ಯಮ ಗಳಿದ್ದು, ಯೂನಿಕಾರ್ನ್‍ಗಳಲ್ಲಿ ಪ್ರಪಂಚದ 3ನೇ ಅತೀ ದೊಡ್ಡ ಹಬ್ ಆಗಿದೆ. ಜತೆಗೆ, ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ಭಾರತದ ಸ್ಥಾನಮಾನವು ಕಳೆದ ಎಂಟು ವರ್ಷಗಳಲ್ಲಿ 40 ಸ್ಥಾನಗಳಷ್ಟು ಮೇಲಕ್ಕೆ ಜಿಗಿದಿದೆ ಎಂದು ಅವರು ನುಡಿದರು.

ತಂತ್ರಜ್ಞಾನದ ಮೂಲಕ ದೇಶದಲ್ಲಿ ಸಮಾನತೆ ಮತ್ತು ಸಬಲೀಕರಣಗಳನ್ನು ಸಾಧಿಸಲಾಗುತ್ತಿದೆ. ಜತೆಗೆ, ಭ್ರಷ್ಟಾಚಾರಕ್ಕೂ ಇದು ತೆರೆ ಎಳೆದಿದೆ. ಭಾರತವಂತೂ ಈಗ ಮಾಹಿತಿ ಸೂಪರ್ ಹೈವೇ ಆಗಿದೆ. ಕೊರೊನಾ ಪಿಡುಗಿನ ವಿರುದ್ಧ ಹೋರಾಟ, ಶಿಕ್ಷಣ, ನೇರ ನಗದು ವರ್ಗಾವಣೆ, ಜನ್‍ಧನ್, ಆಧಾರ್, ಇ-ಮಾರ್ಕೆಟ್ ಎಲ್ಲವನ್ನೂ ಭಾರತವು ತಂತ್ರಜ್ಞಾನದ ಸಮರ್ಥ ಬಳಕೆಯ ಮೂಲಕ ಯಶಸ್ವಿಯಾಗಿ ಕೈಗೊಂಡಿದೆ ಎಂದು ಮೋದಿ ವಿವರಿಸಿದರು. ಹೂಡಿಕೆದಾರರ ನಂಬಿಕೆ ಮತ್ತು ದೇಶದಲ್ಲಿರುವ ತಂತ್ರಜ್ಞಾನದ ಶಕ್ತಿ ಎರಡೂ ಸೇರಿದರೆ, ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಾಧ್ಯವಾಗಲಿದೆ. ಇದು ಸಣ್ಣಪುಟ್ಟ ವ್ಯಾಪಾರಿಗಳಿಗೆ ಅನುಕೂಲಕರವಾಗಿದ್ದು, ದೊಡ್ಡ ಗ್ರಾಹಕರನ್ನು ಸೃಷ್ಟಿಸಿದೆ.

ಈಗ ಗ್ರಾಮೀಣ ಭಾಗಗಳಲ್ಲಿ ಬ್ರಾಡ್‍ಬ್ಯಾಂಡ್ ಕ್ರಾಂತಿ ನಡೆಯುತ್ತಿದ್ದು, ಮೊಬೈಲ್‍ನ ವ್ಯಾಪಕ ಬಳಕೆಯಿಂದಾಗಿ ಪ್ರಪಂಚವೇ ಬೆರಗಿನಿಂದ ನೋಡುತ್ತಿರುವಂಥ ಡಿಜಿಟಲ್ ಆರ್ಥಿಕತೆ ನಮ್ಮಲ್ಲಿ ರೂಪುಗೊಂಡಿದೆ ಎಂದು ಅವರು ಪ್ರತಿಪಾದಿಸಿದರು.

ತಂತ್ರಜ್ಞಾನದ ಅಳವಡಿಕೆ ಮೂಲಕ ನಾವು 200 ಕೋಟಿಗೂ ಹೆಚ್ಚು ಕೊರೊನಾ ಲಸಿಕೆ ನೀಡಿದ್ದೇವೆ. ಹಾಗೆಯೇ 200 ದಶಲಕ್ಷ ಕುಟುಂಬಗಳ 600 ದಶಲಕ್ಷ ಜನರಿಗೆ ಆಯುಷ್ಮಾನ್ ಭಾರತ ಯೋಜನೆಯ ಮೂಲಕ ವೈದ್ಯಕೀಯ ಚಿಕಿತ್ಸೆ ಸಿಗುವಂತೆ ಮಾಡಿದ್ದೇವೆ. ನಮ್ಮಲ್ಲಿ ಸಿಗುತ್ತಿರುವಷ್ಟು ಅಗ್ಗದ ದರದಲ್ಲಿ ಡೇಟಾ ಎಲ್ಲೂ ಸಿಗುತ್ತಿಲ್ಲ. ಒಟ್ಟಿನಲ್ಲಿ ತಂತ್ರಜ್ಞಾನದ ಮೂಲಕ ಭಾರತವು ಬೇರ್ಯಾವ ದೇಶಕ್ಕೂ ಸಾಧ್ಯವಾಗದಂತಹ ಸಾಧನೆಗಳನ್ನು ಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

‘ಎಲ್ಲರಿಗೂ ಕರ್ನಾಟಕಕ್ಕೆ ಸ್ವಾಗತ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ‘ಬೆಂಗಳೂರು ಎಲ್ಲರನ್ನೂ ಒಳಗೊಳ್ಳುವ (ಇನ್‍ಕ್ಲೂಸೀವ್) ಮತ್ತು ನಾವೀನ್ಯತೆಯ ಸಂಸ್ಕೃತಿಯ ನಗರವಾಗಿದೆ. ಜಾಗತಿಕ ನಾವೀನ್ಯತಾ ಸೂಚ್ಯಂಕದಲ್ಲಿ ನಗರವು ಎಷ್ಟೋ ವರ್ಷಗಳಿಂದ ಪ್ರಥಮ ಸ್ಥಾನದಲ್ಲಿ ವಿರಾಜಿಸುತ್ತಿದೆ. ನಮ್ಮೆಲ್ಲರ ಭವಿಷ್ಯ ಮತ್ತಷ್ಟು ವ್ಯಾಪಕವೂ ಉಜ್ವಲವೂ ಆಗಿರಲಿದೆ. ಬೆಂಗಳೂರು ಸಂಶೋಧನೆಯ ತಾಣವಾಗಿದ್ದು, ಇಲ್ಲಿ ತಂತ್ರಜ್ಞಾನ ಕ್ರಾಂತಿ ಸಂಭವಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Translate »