ಅಗತ್ಯವಿರುವ ಆಮ್ಲಜನಕ, ರೆಮ್ಡಿಸಿವಿರ್ ಪೂರೈಕೆಗೆ ಕೇಂದ್ರ ಸಿದ್ಧ
ಮೈಸೂರು

ಅಗತ್ಯವಿರುವ ಆಮ್ಲಜನಕ, ರೆಮ್ಡಿಸಿವಿರ್ ಪೂರೈಕೆಗೆ ಕೇಂದ್ರ ಸಿದ್ಧ

April 24, 2021

ಪ್ರಧಾನಿ ನರೇಂದ್ರ ಮೋದಿ ಭರವಸೆ
ರೈಲ್ವೆ, ವಾಯುಪಡೆ ವಿಮಾನದಲ್ಲಿ ಆಕ್ಸಿಜನ್ ಪೂರೈಕೆ
ದುರ್ಬಳಕೆ ಆಗದಂತೆ ಎಚ್ಚರ ವಹಿಸಲು ಸೂಚನೆ
1471 ಟನ್ ಆಮ್ಲಜನಕಕ್ಕೆ ಯಡಿಯೂರಪ್ಪ ಬೇಡಿಕೆ
ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ವಿವರಿಸಿದ ಬಿಎಸ್‍ವೈ
ನವದೆಹಲಿ, ಏ.23- ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಗಳೂ ಪರಸ್ಪರ ಸಹ ಕರಿಸುವ ಮೂಲಕ ಸವಾಲನ್ನು ಸಮರ್ಥವಾಗಿ ಎದುರಿ ಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ

ಅವರು ಇಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಈ ವಿಷಯ ತಿಳಿಸಿದರು. ಈಗ ಎದುರಾಗಿರುವ ವಿಪತ್ತನ್ನು ಎದುರಿಸಲು ಆರೋಗ್ಯ ಸೇವಾ ವ್ಯವಸ್ಥೆ ಸುಧಾರಣೆಗೆ ಒತ್ತು ನೀಡುವುದು, ಮುನ್ನೆಚ್ಚರಿಕೆ ಕ್ರಮಗಳ ಕಟ್ಟುನಿಟ್ಟಿನ ಪಾಲನೆ, ಅನಗತ್ಯವಾಗಿ ಆಸ್ಪತ್ರೆಗೆ ದಾಖಲಾಗುವುದನ್ನು ತಪ್ಪಿಸುವುದು ಹಾಗೂ ಆಮ್ಲಜನಕದ ಸಮರ್ಪಕ ಹಾಗೂ ಮಿತಬಳಕೆಗೆ ಆದ್ಯತೆ ನೀಡುವುದು, ಜನರಲ್ಲಿ ವಿಶ್ವಾಸ ಮೂಡಿಸುವುದು ಅತಿ ಅಗತ್ಯ ಎಂದು ಪ್ರಧಾನಮಂತ್ರಿಯವರು ತಿಳಿಸಿದರು. ಆಮ್ಲಜನಕದ ದುರ್ಬಳಕೆಯಾಗದಂತೆ ಎಲ್ಲ ರಾಜ್ಯ ಗಳಲ್ಲೂ ಆಕ್ಸಿಜನ್ ಆಡಿಟ್ ಮಾಡಿಸುವಂತೆ ಪ್ರಧಾನ ಮಂತ್ರಿ ಯವರು ಸಲಹೆ ನೀಡಿದರು. ಜೊತೆಗೆ ಆಮ್ಲಜನಕದ ಟ್ಯಾಂಕರು ಗಳ ಸುಗಮ ಸಂಚಾರಕ್ಕೆ ರಾಜ್ಯ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು. ಆಮ್ಲಜನಕ ಮತ್ತು ರೆಮ್ಡಿಸಿವಿರ್ ಸದ್ಬಳಕೆಯಾಗುವ ನಿಟ್ಟಿನಲ್ಲಿ ಆತಂಕದ ಕೊಳ್ಳುವಿಕೆ ಯನ್ನು ನಿಯಂತ್ರಿಸುವಂತೆ ಅವರು

ಸಲಹೆ ಮಾಡಿದರು. ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ಮಾನವ ಸಂಪನ್ಮೂಲ ಅಗತ್ಯತೆಯೂ ಹೆಚ್ಚುತ್ತಿದ್ದು, ಇತ್ತೀಚೆಗೆ ನಿವೃತ್ತರಾದ ಸಿಬ್ಬಂದಿಯ ಸೇವೆ ಬಳಕೆ ಮಾಡಿಕೊಳ್ಳಿ ಎಂದು ಪ್ರಧಾನಮಂತ್ರಿಯವರು ತಿಳಿಸಿದರಲ್ಲದೆ, ಆಮ್ಲಜನಕ ಪೂರೈಕೆಗೆ ರೈಲ್ವೆ, ವಾಯುಪಡೆ ವಿಮಾನ ನಿಯೋಜಿಸಿರುವುದಾಗಿ ತಿಳಿಸಿದರು. ಇದಕ್ಕಾಗಿ ಆಕ್ಸಿಜನ್ ಎಕ್ಸ್‍ಪ್ರೆಸ್ ರೈಲು ವ್ಯವಸ್ಥೆ ಮಾಡುವುದಾಗಿಯೂ ಹೇಳಿದರು. ಇದೇ ವೇಳೆ ಖಾಲಿ ಆಕ್ಸಿಜನ್ ಟ್ಯಾಂಕರ್‍ಗಳನ್ನು ವಾಯುಪಡೆ ವಿಮಾನದಿಂದ ಸಾಗಿಸಲಾಗುತ್ತಿದೆ ಎಂದರು.

ಹೆಚ್ಚುವರಿ ಆಮ್ಲಜನಕಕ್ಕೆ ಬೇಡಿಕೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾತನಾಡಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಕೈಗೊಳ್ಳುತ್ತಿರುವ ಕ್ರಮಗಳು ಹಾಗೂ ರಾಜ್ಯದ ವಸ್ತುಸ್ಥಿತಿಯನ್ನು ವಿವರಿಸಿದರು.

ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ರಾಜ್ಯದಲ್ಲಿ ಆಮ್ಲಜನಕದ ಬಳಕೆ ದಿನೇ ದಿನೆ ಹೆಚ್ಚುತ್ತಿದ್ದು, ನಿನ್ನೆ ರಾಜ್ಯದಲ್ಲಿ 500 ಟನ್ ಬಳಕೆಯಾಗಿದೆ. ಕೇಂದ್ರ ಸರ್ಕಾರವು ರಾಜ್ಯಕ್ಕೆ ಕೇವಲ 300 ಟನ್ ಆಮ್ಲಜನಕ ಹಂಚಿಕೆ ಮಾಡಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಹಲವು ಆರೋಗ್ಯ ಸೇವಾ ಕೇಂದ್ರಗಳನ್ನು ಮುಚ್ಚುವ ಪರಿಸ್ಥಿತಿ ಎದುರಾಗುವುದು. ಭಾರತ ಸರ್ಕಾರದ ಮಾರ್ಗ ಸೂಚಿಗಳನ್ವಯ ರಾಜ್ಯಕ್ಕೆ ಏಪ್ರಿಲ್ 25 ರಿಂದ 1142 ಟನ್ ಆಮ್ಲಜನಕ ಅಗತ್ಯವಿದೆ ಹಾಗೂ ಏಪ್ರಿಲ್ 30ರ ನಂತರ 1471 ಟನ್ ಆಮ್ಲಜನಕದ ಅಗತ್ಯವಿದೆ. ಆಮ್ಲಜನಕ ಕೊರತೆ ನೀಗಿಸಿ, ಕೂಡಲೇ 1471 ಟನ್ ಆಮ್ಲಜನಕ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿಗಳು ಪ್ರಧಾನಿಯವರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಪಾಸಿಟಿವಿಟಿ ದರ ಶೇ.16ರಷ್ಟಿದೆ. ಬೆಂಗಳೂರು ನಗರ ಅತೀ ಹೆಚ್ಚು ಪೀಡಿತವಾಗಿದ್ದು, ತುಮಕೂರು, ಬಳ್ಳಾರಿ, ಮೈಸೂರು, ಹಾಸನ ಮತ್ತು ಕಲಬುರಗಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿವೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ತಡೆಯಲು ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಜೊತೆಗೆ ಇತರ ಮುನ್ನೆಚ್ಚರಿಕೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ರಾಜ್ಯದ ಆರ್ಥಿಕ ಚಟುವಟಿಕೆಗಳ ಮೇಲೆ ಕನಿಷ್ಠ ಪರಿಣಾಮವಾಗುವ ರೀತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಕಳೆದ ಆರು ತಿಂಗಳಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ವಹಿಸಿದ್ದು, ಇದೀಗ ಅನುಕೂಲವಾಗಿದೆ. ಸರ್ಕಾರದ ಶಿಫಾರಸಿನ ಮೇರೆಗೆ ರೋಗಿಗಳನ್ನು ದಾಖಲಿಸಲು ಖಾಸಗಿ ಆಸ್ಪತ್ರೆಗಳ ಶೇ.50ರಷ್ಟು ಹಾಸಿಗೆಗಳನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಹೆಚ್ಚಿನ ಬೇಡಿಕೆ ಬಂದರೆ ಅನುವಾಗುವಂತೆ ಖಾಸಗಿ ಆಸ್ಪತ್ರೆಗಳು ಸಮೀಪದ ಹೋಟೆಲ್‍ಗಳ ಸಹಯೋಗದೊಂದಿಗೆ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ. ಐಸಿಯು ಸೌಲಭ್ಯಗಳಿರುವ ಫೀಲ್ಡ್ ಆಸ್ಪತ್ರೆಗಳನ್ನು ಸ್ಥಾಪಿಸಲು ಸಹ ಚಿಂತನೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ರೆಮ್ಡಿಸಿವಿರ್ ಕೊರತೆಯಾಗದಂತೆ ಎಚ್ಚರ ವಹಿಸಲಾಗುತ್ತಿದ್ದು, ಮುಂದಿನ 10 ದಿನಗಳಿಗೆ 2 ಲಕ್ಷ ಡೋಸ್‍ಗಳಷ್ಟು ರೆಮ್ಡಿಸಿವಿರ್ ಒದಗಿಸುವಂತೆ ಮುಖ್ಯಮಂತ್ರಿಗಳು ಪ್ರಧಾನಿ ಯವರಿಗೆ ಮನವಿ ಮಾಡಿದರು. ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಮುಖ್ಯಮಂತ್ರಿಗಳು, ನಗರದ 8 ವಲಯಗಳ ಕೋವಿಡ್ ನಿರ್ವಹಣೆ ಉಸ್ತುವಾರಿಗೆ ಸಚಿವರನ್ನು ನೇಮಕ ಮಾಡಲಾಗಿದೆ. ಹಿರಿಯ ಐಎಎಸ್ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ಲಸಿಕೆ ಕಾರ್ಯಕ್ರಮದ ಪ್ರಗತಿಯೂ ಉತ್ತಮವಾಗಿದ್ದು, ಈವರೆಗೆ 82 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಮೇ 1 ರಿಂದ ಹೊಸ ಲಸಿಕಾ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಿಗೂ ಲಸಿಕೆಗಳು ಸಮಾನವಾಗಿ ಹಂಚಿಕೆಯಾಗುವಂತೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ಮನವಿ ಮಾಡಿದರು.

Translate »