ಇಂದಿನಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಪುನರಾರಂಭ
ಮೈಸೂರು

ಇಂದಿನಿಂದ ಕೊಡಗಿನಲ್ಲಿ ಶಾಲಾ-ಕಾಲೇಜು ಪುನರಾರಂಭ

August 23, 2018

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ತಗ್ಗಿದ್ದು, ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ ಅತಿವೃಷ್ಟಿ ಯಿಂದ ತೀವ್ರ ಹಾನಿಗೀಡಾಗಿರುವ ಪ್ರದೇಶಗಳ 61 ಶಾಲೆಗಳನ್ನು ಹೊರತುಪಡಿಸಿ, ಉಳಿದ ಶಾಲಾ-ಕಾಲೇಜು ಪುನರಾರಂಭಿಸಲು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅನ್ಬುಕುಮಾರ್, ಜಿಲ್ಲಾಧಿ ಕಾರಿ ಪಿ.ಐ.ಶ್ರೀವಿದ್ಯಾ ಉಪಸ್ಥಿತಿಯಲ್ಲಿ ನಡೆದ ಸಭೆ ಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ಅತಿವೃಷ್ಟಿಯಿಂದಾಗಿ ಸಾಕಷ್ಟು ಮಂದಿ ಸಂಕಷ್ಟಕ್ಕೆ ತುತ್ತಾಗಿದ್ದು, ಸಂತ್ರಸ್ತರ ಮಕ್ಕಳ ಶಿಕ್ಷಣಕ್ಕಾಗಿ ಐದು ಸಾವಿರ ಶಾಲಾ ಪುಸ್ತಕ ನೀಡಲು ಕ್ರಮ ಕೈಗೊಳ್ಳಲಾಗಿದೆ. ಪರಿಹಾರ ಕೇಂದ್ರಗಳಲ್ಲೇ ಮಕ್ಕಳಿಗೆ ಶಾಲಾ ಪಠ್ಯ ಚಟುವಟಿಕೆ ಆರಂಭಿಸಲಾಗಿದೆ ಎಂದರು.

ಈಗಾಗಲೇ ಸಂತ್ರಸ್ತರಿಗೆ ರಾಜ್ಯದ ವಿವಿಧ ಭಾಗಗಳಿಂದ ಆಹಾರ ಹಾಗೂ ಇತರ ಸಾಮಗ್ರಿಗಳು ಪೂರೈಕೆಯಾಗಿದ್ದು ಜಿಲ್ಲೆಯಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಗಳ ಸಂತ್ರಸ್ತರಿಗೆ ವ್ಯವಸ್ಥಿತ ಮತ್ತು ಉತ್ತಮ ಆಹಾರ ಪೂರೈಸಬೇಕು ಎಂದು ಅವರು ನಿರ್ದೇಶನ ನೀಡಿದರು.

ಪರಿಹಾರ ಕೇಂದ್ರಗಳಲ್ಲಿ ಯಾವುದೇ ರೀತಿಯ ದೂರುಗಳು ಬರದಂತೆ ನೋಡಿಕೊಳ್ಳಬೇಕು. ಲೋಪಗಳು ಕಂಡುಬಂದರೆ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಕೆ ನೀಡಿದರು.
ಪರಿಹಾರ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಬಿಸಿ ನೀರಿನ ವ್ಯವಸ್ಥೆ ಕಲ್ಪಿಸಲು ಗ್ಯಾಸ್ ಗೀಸರ್ ಹಾಗೂ ಅಡುಗೆ ಅನಿಲ ಪೂರೈಸುವಂತೆ ಆಹಾರ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ತ್ವರಿತವಾಗಿ ವಿತರಣೆ ಮಾಡಲು ಅನುಕೂಲವಾಗುವಂತೆ ಜಿಲ್ಲೆಯ 5 ದಾಸ್ತಾನು ಕೇಂದ್ರಗಳ ಮೂಲಕ 100 ಕ್ಕೂ ಹೆಚ್ಚು ವಾಹನಗಳಲ್ಲಿ ಗ್ರಾ.ಪಂ.ಹಾಗೂ ಇತರೆ ಪಟ್ಟಣ ಪ್ರದೇಶಗಳಿಗೆ ನಿರಂತರವಾಗಿ ತಲುಪಿಸಲಾಗುತ್ತಿದ್ದು, ಅರ್ಹ ಸಂತ್ರಸ್ತರಿಗೆ ಸಮರ್ಪಕವಾಗಿ ತಲುಪುವಂತಾಗಲು ವಿಶೇಷ ಗಮನಹರಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ನಿರಾಶ್ರಿತರಿಗೆ ಒದಗಿಸಲು ಹೆಚ್ಚುವರಿಯಾಗಿ ಟಾರ್ಪಲ್ ಹಾಗೂ ಪ್ಲಾಸ್ಟಿಕ್ ಬ್ಯಾಗ್‍ಗಳು ಅಗತ್ಯವಿದ್ದು, ಉಳಿದಂತೆ ಇತರೆ ಎಲ್ಲಾ ಬಗೆಯ ಪರಿಹಾರ ಸಾಮಗ್ರಿಗಳು ದಾಸ್ತಾನು ಕೇಂದ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಅವುಗಳನ್ನು ಸಂತ್ರಸ್ತರಿಗೆ ಚಾಚು ತಪ್ಪದೆ ತಲುಪಿಸುವಂತೆ ಸಂಬಂಧಪಟ್ಟ ನೋಡಲ್ ಅಧಿಕಾರಿಗಳಿಗೆ ಸಾ.ರಾ.ಮಹೇಶ್ ಸೂಚಿಸಿದರು.
ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಕ್ಷಣವೇ ಕೈಗೊಳ್ಳುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಕೃತಿ ವಿಕೋಪದಿಂದ ಉಂಟಾದ ಮನೆ ಹಾನಿ, ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟದ ಸಮೀಕ್ಷೆ ವರದಿ ಪಡೆದು ಸಂಬಂಧಪಟ್ಟವರಿಗೆ ಪರಿಹಾರ ಧನ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾ.ರಾ.ಮಹೇಶ್ ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಇವರ ಸಮನ್ವಯತೆಯಲ್ಲಿ ಅಗತ್ಯಕ್ಕೆ ಅನುಗುಣವಾಗಿ ಡ್ರೋಣ್ ಕ್ಯಾಮರಾಗಳನ್ನು ಬಳಸಿ ಸಮೀಕ್ಷಾ ಕಾರ್ಯ ಕೈಗೊಳ್ಳಲಾಗುವುದು.
ಅತಿವೃಷ್ಟಿಯಿಂದಾಗಿ ಆಸ್ತಿ-ಪಾಸ್ತಿಯ ದಾಖಲೆಗಳನ್ನು ಕಳೆದುಕೊಂಡವರಿಗೆ ದಾಖಲೆಗಳನ್ನು ಸೃಜಿಸಿಕೊಡುವ ಕಾರ್ಯ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಮಾಹಿತಿ ನೀಡಿದರು.

ವಸತಿ ಇಲಾಖೆ ಆಯುಕ್ತರಾದ ಅನ್ಬುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಸುಮನ್ ಡಿ.ಪೆನ್ನೇಕರ್, ಚಾರುಲತಾ ಸೋಮಲ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಇತರರು ಇದ್ದರು.

Translate »