ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ

ಸೋಮವಾರಪೇಟೆ: ಹಾಸನದಲ್ಲಿ ಶಾಸಕರ ಮನೆ ಮತ್ತು ಬಿಜೆಪಿ ಕಾರ್ಯ ಕರ್ತರ ಮೇಲಿನ ದಾಳಿ ಖಂಡಿಸಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪಟ್ಟಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ರೇವಣ್ಣ ಅವರಿಗೆ ಹಾಸನದಲ್ಲಿ ಬಿಜೆಪಿಯ ಪ್ರೀತಮ್ ಗೌಡ ಅವರ ಗೆಲುವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಮುಂದುವರೆದ ಭಾಗವಾಗಿ ಜೆಡಿಎಸ್‍ನ ಕಾರ್ಯಕರ್ತರ ಸೋಗಿನಲ್ಲಿರುವ ಗೂಂಡಾಗಳು ಶಾಸಕರ ಮನೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ ಎಂದು ಪ್ರತಿಭಟನಾ ಕಾರರು ಆರೋಪಿಸಿದರು. ತಕ್ಷಣ ಹಲ್ಲೆ ನಡೆಸಿದ ಗೂಂಡಾಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ಮುಖ್ಯಮಂತ್ರಿ ಮತ್ತು ಎಲ್ಲಾ ಮಂತ್ರಿಗಳ ಮನೆ ಎದುರು ಯುವ ಮೋರ್ಚಾದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಮುಖರಾದ ಮನು ಕುಮಾರ್ ರೈ, ಯುವ ಮೋರ್ಚಾ ಅಧ್ಯಕ್ಷ ಸುನಿಲ್ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಜಿಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷೆ ತಂಗಮ್ಮ, ಪಪಂ ಸದಸ್ಯ ಮಹೇಶ್, ನಗರ ಬಿಜೆಪಿ ಅಧ್ಯಕ್ಷ ಸೋಮೇಶ್ ಸೇರಿದಂತೆ ಇತರರಿದ್ದರು.