ರೈತರ ವಾಣಿಜ್ಯ ಬ್ಯಾಂಕ್ ಸಾಲ ಮನ್ನಾ ಪ್ರಕ್ರಿಯೆ ಡಿ.5ರಿಂದ ಆರಂಭ
ಮೈಸೂರು

ರೈತರ ವಾಣಿಜ್ಯ ಬ್ಯಾಂಕ್ ಸಾಲ ಮನ್ನಾ ಪ್ರಕ್ರಿಯೆ ಡಿ.5ರಿಂದ ಆರಂಭ

November 28, 2018

ಬೆಂಗಳೂರು: ರೈತರ ಸಾಲ ಮನ್ನಾ ಯೋಜನೆ ಕುರಿತಂತೆ ಕೆಲವು ವಲಯಗಳಲ್ಲಿ ಅನಗತ್ಯ ಅಪಪ್ರಚಾರ ನಡೆಯುತ್ತಿದೆ. ರೈತರ ಆತಂಕ ದೂರವಾಗಬೇಕು. ಜಿಲ್ಲಾಧಿಕಾರಿಗಳು ಡಿಸೆಂಬರ್ 1 ರೊಳಗಾಗಿ ಎಲ್ಲ ಮಾಹಿತಿಯನ್ನು ಸಂಗ್ರಹಿಸಿ, ಸಹಕಾರಿ ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ ಸಾಲಮನ್ನಾಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಡಿಸೆಂಬರ್ 5 ರಿಂದ ಪ್ರಾರಂಭಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು ಹಾಗೂ ಪ್ರಾದೇಶಿಕ ಆಯುಕ್ತರ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 33 ಬ್ಯಾಂಕುಗಳಿಂದ 20.8 ಲಕ್ಷ ರೈತರ ಬೆಳೆ ಸಾಲ ಮಾಹಿತಿ ಸಂಗ್ರಹಿಸಲಾಗಿದೆ. ಬೆಳೆ ಸಾಲ ಮನ್ನಾ ಯೋಜನೆ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಸೇಡಂ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಗಿದ್ದು, ಈ ಕೆಲಸ ನಿರಾಂತಕವಾಗಿ ನಡೆದಿದೆ. 4000 ರೈತರು ಸ್ವಯಂ ಘೋಷಿತ ದೃಢೀಕರಣ ಸಲ್ಲಿಸಿದ್ದಾರೆ ಎಂದರು.

ನವೆಂಬರ್ 29 ರಂದು ಬೆಳಿಗ್ಗೆ 9.00 ಗಂಟೆಗೆ ಸಾಲ ಮನ್ನಾ ಯೋಜನೆಯ ಸಮನ್ವಯಾಧಿಕಾರಿ ಮನೀಶ್ ಮೌದ್ಗಿಲ್ ಅವರು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮಾಡಿ ಗೊಂದಲಗಳನ್ನು ನಿವಾರಿಸಲಿದ್ದಾರೆ.

ಮಹತ್ವಾಕಾಂಕ್ಷಿ ಯೋಜನೆಯಾದ ಬಡವರ ಬಂಧು ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಬೀದಿ ಬದಿ ವ್ಯಾಪಾರಿಗಳಿಗೆ ನೆರವು ಒದಗಿಸುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಲು ಸಂಬಂಧಿಸಿದ ಜಿಲ್ಲಾಧಿ ಕಾರಿಗಳಿಗೆ ಸೂಚನೆ ನೀಡಲಾಗಿದೆ. ಬರಪೀಡಿತ ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರು ಪರಿಹಾರಕ್ಕೆ ಜಿಲ್ಲೆಗೆ 50 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದ್ದು, ಪ್ರತಿ ತಾಲೂಕಿಗೆ 25 ಲಕ್ಷ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ರಾಜ್ಯದ 100 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿತವಾಗಿದ್ದು, ಈ ಪ್ರತಿ ತಾಲೂಕಿಗೂ ಬರ ಪರಿಸ್ಥಿತಿ ನಿರ್ವಹಣೆಗಾಗಿ ಒಬ್ಬ ನೋಡೆಲ್ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಪ್ರಸ್ತುತ 15 ಜಿಲ್ಲೆಗಳ 213 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಹಾಗೂ 250 ಖಾಸಗಿ ಬೋರ್ವೆಲ್‍ಗಳನ್ನು ಬಾಡಿಗೆಗೆ ಪಡೆಯುವ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಗೋಶಾಲೆ ಅಥವಾ ಮೇವಿನ ಬ್ಯಾಂಕ್ ತೆರೆಯುವ ಅವಶ್ಯಕತೆ ಬಂದರೆ ಅದಕ್ಕೆ ಸೂಕ್ತ ಸ್ಥಳವನ್ನು ನಿರ್ಧರಿಸಲು ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ. ಹಸಿರು ಮೇವು ಬೆಳೆಯಲು ರೈತರಿಗೆ ಮೇವಿನ ಬೀಜಗಳನ್ನು ಉಚಿತವಾಗಿ ವಿತರಿಸಲು 15 ಕೋಟಿ ರೂ.ಗಳನ್ನು

ಪಶುಸಂಗೋಪನೆ ಇಲಾಖೆಗೆ ಬಿಡುಗಡೆ ಮಾಡಲಾಗಿದೆ. ಬರ, ಪ್ರವಾಹ ಪರಿಸ್ಥಿತಿಯಂತಹ ನೈಸರ್ಗಿಕ ವಿಪತ್ತುಗಳಿಂದ ಉದ್ಭವಿಸ ಬಹುದಾದ ಪರಿಸ್ಥಿತಿಯನ್ನು ನಿರ್ವಹಿಸಲು ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿ ಈಗಾಗಲೇ 7 ಬಾರಿ ಸಭೆ ಸೇರಿ, ಜಿಲ್ಲಾಡಳಿತಗಳಿಗೆ ಸೂಕ್ತ ನಿರ್ದೇಶನ ನೀಡುತ್ತಿದೆ ಎಂದು ತಿಳಿಸಿದರು.

16 ಜಿಲ್ಲೆಗಳ 462 ಗ್ರಾಮಗಳನ್ನು ನೀರಿನ ಸಮಸ್ಯೆ ಇರುವ ಹಳ್ಳಿಗಳೆಂದು ಗುರುತಿಸಲಾಗಿದೆ. ಇಲ್ಲಿಗೆ ಟ್ಯಾಂಕರ್ ಮುಖಾಂತರ ಮತ್ತು ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆಗೆ ಪಡೆಯುವ ಮುಖಾಂತರ ನೀರು ಪೂರೈಸಲಾಗುವುದು. ಕಳೆದ ಸಾಲಿನಲ್ಲಿ ಬರ ಪರಿಹಾರಕ್ಕಾಗಿ 100 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ಈವರೆಗೆ 87.20 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. 6951 ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್‍ಗಳಿಗೆ ತಲಾ 1 ಕೋಟಿಯಂತೆ 30 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಈಗಾಗಲೇ 7.34 ಕೋಟಿ ರೂ.ಗಳ ವೆಚ್ಚ ಮಾಡಲಾಗಿದೆ. ಈರುಳ್ಳಿ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಈರುಳ್ಳಿ ಬೆಳೆಗಾರರಿಗೆ ಬೆಂಬಲ ಬೆಲೆ ನೀಡಲು ತೀರ್ಮಾನಿಸಲಾಗಿದೆ ಎಂದರು.

ಪ್ರಕೃತಿ ವಿಕೋಪಕ್ಕೆ ತುತ್ತಾದ ಜಿಲ್ಲೆಗಳಿಗೆ ಬಿಡುಗಡೆಯಾದ ಪರಿಹಾರದ 200 ಕೋಟಿ ರೂ. ಮೊತ್ತವನ್ನು ಯಾವ ಕೆಲಸಗಳಿಗೆ ಬಳಕೆಯಾಗಿದೆ ಎಂದು ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. 200 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 79 ಕೋಟಿ , ಲೋಕೋಪಯೋಗಿ ಇಲಾಖೆಗೆ 92 ಕೋಟಿ ರೂ., ನಗರಾಭಿವೃದ್ಧಿ ಇಲಾಖೆಗೆ 16 ಕೋಟಿ ರೂ. , ಸಣ್ಣ ನೀರಾವರಿ ಇಲಾಖೆಗೆ 6.91 ಕೋಟಿ ರೂ. ಹಾಗೂ ಇಂಧನ ಇಲಾಖೆಗೆ 5.21 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗೆ ಇನ್ನಷ್ಟು ವೇಗ ನೀಡಲು ಸೂಚನೆ. ವಸತಿ ಇಲಾಖೆಯ ಬಸವ ವಸತಿ, ಪ್ರಧಾನ ಮಂತ್ರಿ ಆವಾಸ್, ಡಾ|| ಬಿ.ಆರ್. ಅಂಬೇಡ್ಕರ್, ವಾಜಪೇಯಿ ನಗರ ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಗುರುತಿಸಬೇಕು ಮತ್ತು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಸತಿಗೆ ಲಭ್ಯವಿರುವ ಸ್ಥಳಗಳನ್ನು ಗುರುತಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಒಂಭತ್ತು ಜಿಲ್ಲೆಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ಕೈಗಾರಿಕಾ ಕ್ಲಸ್ಟರ್ ಗಳಿಗೆ ಅಗತ್ಯವಾದ ಭೂಮಿ ಮಂಜೂರು ಮಾಡಲು ಜಿಲ್ಲಾಧಿಕಾರಿ ಗಳು ಕ್ರಮ ಕೈಗೊಳ್ಳಬೇಕು. ಪ್ರತಿ ಜಿಲ್ಲೆಯಲ್ಲಿ 1 ಲಕ್ಷ ಉದ್ಯೋಗ ಕಲ್ಪಿಸುವ ಈ ಯೋಜನೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಮರಳು ಹಾಗೂ ಗಣಿಗಾರಿಕೆಗೆ ಸಂಬಂಧಿಸಿದಂತೆ ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒರುವ ಸಮಸ್ಯೆ ಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಾರ್ಯದರ್ಶಿಗಳ ಗಮನಕ್ಕೆ ತರಲು ಸೂಚಿಸಲಾಯಿತು.

Translate »