ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ
ಮೈಸೂರು

ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರ

December 10, 2020

ಬೆಂಗಳೂರು,ಡಿ.9-ಕಾಂಗ್ರೆಸ್ ಹಾಗೂ ಜೆಡಿಎಸ್ ವಿರೋಧದ ನಡುವೆಯೇ ವಿಧಾನ ಸಭೆಯಲ್ಲಿ 2020ನೇ ಸಾಲಿನ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ರಾಜ್ಯ ವಿಧಾನಸಭೆ ಅಂಗೀಕಾರ ನೀಡಿದೆ.

ಪಶು ಸಂಗೋಪನೆ ಮತ್ತು ವಕ್ಪ್ ಸಚಿವ ಪ್ರಭು ಚೌವ್ಹಾಣ್ ವಿಧೇಯಕ ಮಂಡನೆಗೆ ಆರಂಭಿಸುತಿದ್ದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದರು. ಸದನ ಸಲಹಾ ಸಮಿತಿಯಲ್ಲಿ ಹೊಸ ವಿಧೇ ಯಕ ಮಂಡನೆ ಮಾಡಬಾರದು. ಈಗಾ ಗಲೇ ಸುಗ್ರೀವಾಜ್ಞೆ ಹೊರಡಿಸಿರುವ ವಿಧೇ ಯಕಗಳನ್ನು ಮಾತ್ರ ಮಂಡಿಸಬೇಕು ಎಂದು ತೀರ್ಮಾನಿಸಲಾಗಿದೆ. ಈಗ ಏಕಾಏಕಿ ಹೊಸ ಬಿಲ್ ಮಂಡಿಸುತ್ತಿದ್ದಾರೆ.ನಾವು ಇದನ್ನು ಒಪ್ಪುವುದಿಲ್ಲ ಎಂದು ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರ ಪ್ರತಿಭಟನೆ ನಡೆಸಿ ದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾ ರದ ಮುಖ್ಯ ಸಚೇತಕ ಸುನೀಲ್ ಕುಮಾರ್ ಯಾವುದಾದರೂ ಅಗತ್ಯ ಬಿಲ್ ಇದ್ದರೆ ಅದನ್ನು ತರಬಹುದು ಎಂದು ಚರ್ಚೆಯಾಗಿತ್ತು. ಇದು ಅಗತ್ಯ ಬಿಲ್. ಅದನ್ನು ನಾವು ಮಂಡಿ ಸಿದ್ದೇವೆ. ನಿಮ್ಮ ಮಾತು ಕೇಳಿ ಬಿಲ್ ತರ ಬೇಕಿಲ್ಲ. ನೀವು ಅದರ ಮೇಲೆ ಚರ್ಚೆ ಮಾಡಿ ಎಂದರು. ಸ್ಪೀಕರ್ ಕಾಗೇರಿ ಕೂಡ ನಿನ್ನೆ ಮಹತ್ವದ ಬಿಲ್ ಮಂಡನೆ ಮಾಡಬಹುದು ಎಂದು ಚರ್ಚೆಯಾಗಿತ್ತು. ಹೀಗಾಗಿ ಇದನ್ನು ಮಂಡನೆಗೆ ಅವಕಾಶ ಕೊಟ್ಟಿರು ವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ಆರೋಪ ಪ್ರತ್ಯಾರೋಪ ನಡೆಯಿತು ಸಭೆಯಲ್ಲಿ ಗದ್ದಲದ ವಾತಾವರಣ ಏರ್ಪಟ್ಟಿತು. ಗದ್ದಲದ ನಡುವೆಯೇ ಪ್ರಭು ಚೌವ್ಹಾಣ್ ವಿಧೇಯಕ ಮಂಡಿಸಿದರು. ವಿಧೇಯಕ ಮಂಡನೆ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಿಜೆಪಿಯವರೂ ದನ ಕಡಿಯುವ ಕಾಂಗ್ರೆಸ್‍ನವರಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಎಚ್.ಕೆ.ಪಾಟೀಲ್ ಮಾತನಾಡಿ, ಸಂವಿಧಾನವನ್ನು ನಿಮ್ಮ ಪಕ್ಷದ ಕಚೇರಿಯನ್ನಾಗಿ ಮಾಡಬೇಡಿ ಬಿಲ್ ಮಂಡನೆ ಬಗ್ಗೆ ಯಾವುದೇ ಅವಕಾಶ ಇಲ್ಲ ಎಂದು ಚರ್ಚೆಯಾಗಿದೆ ಎಂದರು.

ವಿಧಾನಸಭೆಯಲ್ಲಿ ಭೂ ಸುಧಾರಣೆ ಕಾಯ್ದೆಗೆ ಧ್ವನಿ ಮತದ ಅಂಗೀಕಾರ
ಬೆಂಗಳೂರು, ಡಿ.9-ಕಾಂಗ್ರೆಸ್ ಶಾಸಕರ ಸಭಾ ತ್ಯಾಗದ ನಡುವೆ ವಿಧಾನಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮಂಡಿಸಿದ ಭೂ ಸುಧಾರಣೆ ಕಾಯ್ದೆಗೆ ಧ್ವನಿ ಮತದ ಅಂಗೀಕಾರ ದೊರೆತಿದೆ. ಅಶೋಕ್ ಅವರು ವಿಧೇಯಕವನ್ನು ಮಂಡಿಸಿದಾಗ ಕಾಂಗ್ರೆಸ್‍ನ ಹೆಚ್.ಕೆ.ಪಾಟೀಲ್ ಮಾತನಾಡಿ, ಕರ್ನಾಟಕದವರಿಗೆ ಮಾತ್ರ ಜಮೀನು ಖರೀದಿಸಲು ಅವಕಾಶವಿರಬೇಕು. ಅನ್ಯ ರಾಜ್ಯದವರು ಜಮೀನು ಖರೀದಿಸಿದರೆ ಅದನ್ನು ರದ್ದುಪಡಿಸುವ ಅಧಿಕಾರ ಕೊಡಿ ಎಂದು ಮಸೂದೆಗೆ ತಿದ್ದುಪಡಿ ಸೂಚಿಸಿದರು. ಅಲ್ಲದೇ ತಿದ್ದುಪಡಿ ಗಳೊಂದಿಗೆ ವಿಧೇಯಕ ಪರ್ಯಾಲೋಚನೆ ಮಾಡಬೇಕೆಂದು ಒತ್ತಾಯಿಸಿದರು. ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ ಸಚಿವ ಜೆ.ಸಿ.ಮಾಧುಸ್ವಾಮಿ, ಒಮ್ಮೆ ವಿಧೇಯಕ ಅಂಗೀಕಾರ ವಾದ ನಂತರ ತಿದ್ದುಪಡಿಗೆ ಅವಕಾಶವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅವರಿಗೆ ಶಾಸಕ ಕೆ.ಜಿ.ಬೋಪಯ್ಯ ಹಾಗೂ ಸಚಿವ ಆರ್.ಅಶೋಕ್ ಧ್ವನಿಗೂಡಿಸಿದರು. ಈ ವೇಳೆ ಸಿದ್ದರಾಮಯ್ಯ, ರಾಜ್ಯದ ರೈತರನ್ನು ನಿರ್ಗತಿಕರನ್ನಾಗಿ ಮಾಡುತ್ತಿದ್ದೀರಿ. ಇದಕ್ಕೆ ನಮ್ಮ ವಿರೋಧವಿದೆ ಎಂದರು. ನಂತರ ಎಲ್ಲಾ ಕಾಂಗ್ರೆಸ್ ಶಾಸಕರು ಸಭಾತ್ಯಾಗ ಮಾಡಿದರು. ಆಗ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿಧೇಯಕವನ್ನು ಮತಕ್ಕೆ ಹಾಕಿದಾಗ ಧ್ವನಿ ಮತದ ಅನುಮೋದನೆ ದೊರೆಯಿತು. ವಿಧಾನಸಭೆಯಲ್ಲಿ ಆರ್. ಅಶೋಕ್ ಮಂಡಿಸಿದ 2020ನೇ ಸಾಲಿನ ಕರ್ನಾಟಕ ಸ್ಟಾಂಪ್ (ಎರಡನೇ ತಿದ್ದುಪಡಿ) ಉನ್ನತ ಶಿಕ್ಷಣ ಸಚಿವರೂ ಆದ ಡಿಸಿಎಂ ಡಾ.ಅಶ್ವತ್ಥನಾರಾಯಣ್ ಮಂಡಿಸಿದ 2020ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಮತ್ತು ಕೆಲವು ಇತರೆ ಕಾನೂನುಗಳು (ಎರಡನೇ ತಿದ್ದುಪಡಿ) ವಿಧೇಯಕ, ಅಲ್ಲದೇ ಜೆ.ಸಿ.ಮಾಧುಸ್ವಾಮಿ ಮಂಡಿಸಿದ ಕರ್ನಾ ಟಕ ಸಂಸದೀಯ ಕಾರ್ಯದರ್ಶಿಗಳ ವೇತನ, ಭತ್ಯೆ ಮತ್ತು ಸಂಕೀರ್ಣ ಉಪ ಬಂಧಗಳ (ನಿರಸನಗೊಳಿಸುವ) ವಿಧೇಯಕ 2020ಕ್ಕೆ ಅನುಮೋದನೆ ದೊರೆಯಿತು.

Translate »