ಬೆಂಗಳೂರು,ಜೂ.17-ಕರ್ನಾಟಕದಲ್ಲಿ ಜೂ.25ರಿಂದ ನಡೆಯಲಿರುವ ಎಸ್ಎಸ್ ಎಲ್ಸಿ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಸಮಸ್ಯೆಗಳು ಎದುರಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ತೊಂದರೆಯಾಗಬಹುದು. ಅಲ್ಲದೆ ವಿದ್ಯಾರ್ಥಿಗಳ ಪೋಷಕರು ಆತಂಕದಲ್ಲಿ ಇದ್ದಾರೆ. ಇಂತಹ ಸಂದಿಗ್ದ ಪರಿಸ್ಥಿತಿ ಯಲ್ಲಿ ಪರೀಕ್ಷೆ ನಡೆಸದಿರುವುದು ಉತ್ತಮ. ಹಾಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿ ಯಿಂದ ಪರೀಕ್ಷೆ ರದ್ದುಪಡಿಸಬೇಕೆಂದು ಬೆಳ ಗಾವಿಯ ಮಹಿಳೆ ರಾಜಶ್ರೀ ಅವರು ಸುಪ್ರೀಂ ಕೋರ್ಟಿಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು.
ಅರ್ಜಿಯನ್ನು ಆಲಿಸಿದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್, ನ್ಯಾಯಮೂರ್ತಿ ಕೃಷ್ಣ ಮುರಾರಿ, ನ್ಯಾಯ ಮೂರ್ತಿ ಎಸ್.ರವೀಂದ್ರಭಟ್ ಒಳ ಗೊಂಡ ತ್ರಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಇದರೊಂದಿಗೆ ರಾಜ್ಯದ ವಿದ್ಯಾರ್ಥಿಗಳ ಪರೀಕ್ಷೆಗೆ ಎದುರಾದ ತೊಡಕು ನಿವಾರಣೆಯಾದಂತಾಗಿದೆ.