ಅವರವರ ಶಾಸಕರ ಕಾಪಾಡಿಕೊಳ್ಳುವುದು ಅವರ ಕರ್ತವ್ಯ

ಬೆಂಗಳೂರು: ಕಾಂಗ್ರೆಸ್ ಸಭೆಗೂ, ನಮಗೂ ಯಾವುದೇ ರೀತಿಯ ಸಂಬಂಧ ವಿಲ್ಲ. ಯಾವ ಶಾಸಕರು ಎಲ್ಲಿ ಹೋಗಿದ್ದಾರೋ ಅವರನ್ನು ಕರೆತರುವುದು ಅವರವರ ಪಕ್ಷದ ಜವಾಬ್ದಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 104 ಶಾಸಕರು ಒಗ್ಗಟ್ಟಾ ಗಿದ್ದೇವೆ. ಗುರುಗ್ರಾಮ್‍ನಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಸದಸ್ಯರು ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಎಲ್ಲಿಗೆ ಹೋಗಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಬೇರೆ ಪಕ್ಷಗಳ ಆಂತರಿಕ ಚಟುವಟಿಕೆಗಳ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅವರ ಪಕ್ಷದ ಶಾಸಕರು ಹೊರಹೋಗಿದ್ದರೆ ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ. ಅದಕ್ಕೂ ನಮಗೂ ಏನು ಸಂಬಂಧ? ಎಂದು ಪ್ರಶ್ನೆ ಮಾಡಿದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ಕಾರ್ಯತಂತ್ರಗಳನ್ನು ರೂಪಿಸಿದ್ದೇವೆ. ಪ್ರಸ್ತುತ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರುವ ಗೊಂದಲಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಅವರವರ ಹುಳುಕುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.