ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ತಿಂಗಳೊಳಗೆ ಡಿಜಿಟಲ್ ನೋಂದಣಿ, ಪಾವತಿ ವ್ಯವಸ್ಥೆ
News

ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ತಿಂಗಳೊಳಗೆ ಡಿಜಿಟಲ್ ನೋಂದಣಿ, ಪಾವತಿ ವ್ಯವಸ್ಥೆ

August 23, 2022

ಬೆಂಗಳೂರು, ಆ.22(ಕೆಎಂಶಿ)-ಎಲ್ಲಾ ಜಿಲ್ಲಾಸ್ಪತ್ರೆ ಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯ ಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತಾಲೂಕು ಆಸ್ಪತ್ರೆಗಳಿಗೂ ಇದೇ ವ್ಯವಸ್ಥೆ ವಿಸ್ತರಿಸಿ ಜಾರಿ ಮಾಡಲಾಗುವುದು. ಜಯನಗರ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್‍ಲೈನ್‍ನಲ್ಲಿ ಅಥವಾ ಮೊಬೈಲ್ ಸಂದೇಶದ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ತರಲು ಸೂಚಿಸಲಾಗಿದೆ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮುನ್ನವೇ ಆನ್‍ಲೈನ್‍ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಹಾಗೂ ಡಿಜಿಟಲ್ ಪಾವತಿ ಮಾಡುವ ವ್ಯವಸ್ಥೆ ತರಲಾ ಗುವುದು. ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ ಎಂದರು.

ವೈದ್ಯರ ಆಪಾಯಿಂಟ್‍ಮೆಂಟ್ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‍ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ.

ಜಯನಗರ ಸರ್ಕಾರಿ ಆಸ್ಪತ್ರೆ ಎನ್‍ಕ್ಯೂಎಸ್ ಗುಣಮಟ್ಟ ವನ್ನು ಹೊಂದುವಂತೆ ಕ್ರಮ ವಹಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಮೂಲಕ ಸರ್ಕಾರಿ ಸೇವೆಯ ಗುಣಮಟ್ಟವನ್ನು ಹೆಚ್ಚಿಸಬೇಕಿದೆ. ಈಗ ಪರಿಶೀಲನೆ ನಡೆಸಿದ ಬಳಿಕವೂ ಮತ್ತೊಮ್ಮೆ ಬಂದು ಪರಿಶೀಲನೆ ನಡೆಸಿ ಗುರಿ ತಲುಪಲಾಗಿದೆಯೇ ಎಂದು ಗಮನಿಸಲಾಗುವುದು ಎಂದರು.

51 ಹಾಸಿಗೆಗಳ ಐಸಿಯು ಇಲ್ಲಿದೆ. ಕೋವಿಡ್ ಬಳಿಕ ಇಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಯನ್ನು ನೀಡಲಾಗು ವುದು. ಕಾಯಂ ಸಿಬ್ಬಂದಿ ನೇಮಕಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ನಾಲ್ಕು ಆರ್ಥೊಪೆಡಿಕ್ ತಜ್ಞರು ಈ ಆಸ್ಪತ್ರೆಯಲ್ಲಿದ್ದರೂ 40 ಪೆÇ್ರಸೀಜರ್ ಮಾತ್ರ ನಡೆಯುತ್ತಿದೆ. ಈ ಸಂಖ್ಯೆ ಯನ್ನು 100 ಕ್ಕೆ ಹೆಚ್ಚಿಸಿಕೊಳ್ಳಬೇಕು. ಹಾಗೆಯೇ ಸಭೆ ನಡೆಸಿ ವಿವಿಧ ವಿಭಾಗಗಳ ನಡುವೆ ಸಮನ್ವಯತೆ ತರಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.

ಜಯನಗರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಬಗ್ಗೆ ರೋಗಿ ಗಳನ್ನು ಮಾತನಾಡಿಸಿದ್ದು, ಒಬ್ಬರು ಕೂಡ ಗುಣ ಮಟ್ಟದಲ್ಲಿ ಲೋಪ ಆಗಿದೆ ಎಂದು ಹೇಳಿಲ್ಲ. ಐದು ವರ್ಷದಿಂದ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿರುವ ರೋಗಿಯೊಬ್ಬರು, ಯಾವುದೇ ಹಣ ನೀಡದೆ ಚಿಕಿತ್ಸೆ ಪಡೆಯುತ್ತಿದ್ದೇನೆ ಹಾಗೂ ಆರೋಗ್ಯವಾಗಿದ್ದೇನೆ ಎಂದು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಾವಣಿ ಸೇರಿ ದಂತೆ ಕೆಲವೆಡೆ ದುರಸ್ತಿ ಕಾರ್ಯಗಳು ನಡೆಯಬೇಕಿದೆ. ಸುಮಾರು 5 ಕೋಟಿ ರೂ.ನಷ್ಟು ಅನುದಾನ ಬೇಕಿದ್ದು, ಅದನ್ನು ನೀಡಲಾಗುವುದು ಎಂದರು. ರೋಗಿಗಳಿಗೆ ಚಿಕಿತ್ಸೆ ವಿಚಾರದಲ್ಲಿ ಸಮಾಧಾನ ಇದೆ ಎಂದು ತಿಳಿದು ಬಂದಿದೆ. ಪ್ರಸೂತಿ ವಿಭಾಗದಲ್ಲಿ ಕೆಲ ದೂರುಗಳಿದ್ದು, ಅದಕ್ಕಾಗಿ ಸ್ಪಷ್ಟ ಸೂಚನೆ ನೀಡಲಾಗಿದೆ. ಪ್ರತಿ ವಿಭಾಗಗಳ ಮುಖ್ಯಸ್ಥರಿಗೆ ನಿಗದಿತ ಗುರಿ ನೀಡಲಾಗಿದೆ. ಜನರು ಖಾಸಗಿ ಆಸ್ಪತ್ರೆಗೆ ಹೋಗದೆ ಇಲ್ಲಿಯೇ ಬರುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಈ ಹಿಂದೆ ಲಂಚ ಪಡೆದ ಹೊರಗುತ್ತಿಗೆ ವೈದ್ಯರೊಬ್ಬರ ವಿರುದ್ಧ ತನಿಖೆ ನಡೆಯುತ್ತಿದೆ. ಈಗ ತಕ್ಷಣ ಕೆಲಸದಿಂದ ತೆಗೆದುಹಾಕಬೇಕು ಎಂದು ಸೂಚಿಸಲಾಗಿದೆ. ತನಿಖಾ ವರದಿ ಬರುವ ಮುನ್ನವೇ ಅವರನ್ನು ಕೆಲಸದಿಂದ ತೆಗೆದುಹಾಕಲು ತಿಳಿಸಲಾಗಿದೆ. ರಾಜ್ಯದ ಬೇರೆ ಬೇರೆ ಆಸ್ಪತ್ರೆಗಳಿಗೂ ಭೇಟಿ ನೀಡಲಾಗುವುದು. ನಮ್ಮ ಸರ್ಕಾರ ಮಾತೃ ಹೃದಯ ಹೊಂದಿದ್ದು, ಅದಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸಲಾಗುವುದು ಎಂದರು. ಕೋವಿಡ್ ರೋಗಿಗಳಿಂದ ಹಣ ಪಡೆದು ಬಳಿಕ ಸರ್ಕಾರದಿಂದ ಹಣ ಪಡೆದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ, ಹಣ ವನ್ನು ರೋಗಿಗಳಿಗೆ ಹಿಂದಿರುಗಿಸಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರ ಈ ರೀತಿಯ ಕ್ರಮ ವಹಿಸಿ, 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ವಾಪಸ್ ಮಾಡಲಾಗಿದೆ. ಇನ್ನು ಉಳಿದ ಮೊತ್ತವನ್ನು ಕೂಡ ವಾಪಸ್ ಕೊಡಿಸಲಾಗುವುದು. ಮೊತ್ತವನ್ನು ವಾಪಸ್ ಕೊಡಿಸುವವರೆಗೂ ಸರ್ಕಾರ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Translate »