ಬೆಂಗಳೂರು, ಅ. 5(ಕೆಎಂಶಿ)- ಉಪ ಚುನಾವಣೆಗೆ ಅಭ್ಯರ್ಥಿಗಳ ಗತಿಯಿಲ್ಲದೆ ಜೆಡಿಎಸ್ನವರನ್ನು ಸೆಳೆಯುವ ಕಾಂಗ್ರೆಸ್ ರಾಜಕೀಯ ಪಕ್ಷವೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಕಿಡಿಕಾರಿದ್ದಾರೆ.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ ಎಂದು ನಿನ್ನೆ ಹೇಳಿಕೆ ನೀಡಿದ ಬೆನ್ನಲೆ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದರು. ಜೆಡಿಎಸ್ನಿಂದ ಉಪಮುಖ್ಯ ಮಂತ್ರಿಯಾಗಿ ಎಲ್ಲಾ ಅಧಿಕಾರ ಉಂಡ ಸಿದ್ದರಾಮಯ್ಯ ಇದೀಗ ಶಿವಕುಮಾರ್ ಮತ್ತು ಕಾಂಗ್ರೆಸ್ನ್ನು ಮುಗಿಸಲು ಆ ಪಕ್ಷಕ್ಕೆ ವಲಸೆ ಹೋಗಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಇತರ ಪಕ್ಷಗಳೊಂದಿಗೆ ಚೌಕಾಸಿಯಲ್ಲಿ ತೊಡಗಿದೆ. ಭಾರತದಲ್ಲಿ ಈ ಪಕ್ಷ ರಾಜಕೀಯವಾಗಿ ಉಳಿದಿದೆಯೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿ ಕೊಂಡಿದೆ ಎಂದು ಸಿದ್ದರಾಮಯ್ಯ ಕಳೆದ ಚುನಾವಣೆಯಲ್ಲೂ ಹೇಳಿದ್ದರು. ಈಗಲೂ ಹೇಳಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ. ಆದರೆ ಡಾ. ರಾಜೇಶ್ಗೌಡ ಮತ್ತು ನಿಮ್ಮ ಪುತ್ರ ಡಾ. ಯತೀಂದ್ರ ಅವರ ಸಂಬಂಧ ಏನು. ಇಬ್ಬರೂ ಬಿಸಿನೆಸ್ ಪಾಲು ದಾರರಲ್ಲವೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈಗ ಏಕಾಏಕಿ ರಾಜೇಶ್ಗೌಡ ಬಿಜೆಪಿಗೆ ಹೋಗಿದ್ದು ಏತಕ್ಕೆ. ಇವರು ಬಿಜೆಪಿಗೆ ಯಾರ ಚಿತಾವಣೆಯಿಂದ ಹೋಗಿದ್ದಾರೆ. ನೀವೇ ಬಿಜೆಪಿಗೆ ಬೆಂಬಲ ಕೊಡುತ್ತಾ ಇದ್ದೀರಿ. ಇದನ್ನು ಸ್ಪಷ್ಟಪಡಿಸಿ, ಸಿದ್ದರಾಮಯ್ಯನವರೇ? ನಿಮ್ಮ ಚಿಲ್ಲರೆ ರಾಜಕಾರಣ ಬಿಡಿ ಎಂದಿ ದ್ದಾರೆ. ಜೆಡಿಎಸ್ನಿಂದ ಪ್ರವರ್ಧಮಾನಕ್ಕೆ ಬಂದಿದ್ದ ಸಿದ್ದರಾಮಯ್ಯ ಈಗ ಆ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದನ್ನು ಕೈಬಿಡಬೇಕು. ಭಾರತದ ಅತೀ ಹಳೆಯ ರಾಜಕೀಯ ಪಕ್ಷವಾಗಿರುವ ಕಾಂಗ್ರೆಸ್ ಇಂದು ಯಾವ ಪರಿಸ್ಥಿತಿಯಲ್ಲಿದೆ, ಯಾವ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಿದೆ? ಎಲ್ಲೆಲ್ಲಿ ಯಾರು ಯಾರ ಹೆಗಲ ಮೇಲೆ ಕುಳಿತು ರಾಜಕೀಯ ಮಾಡುತ್ತಿದೆ? ಎಲ್ಲೆಲ್ಲಿ ಯಾರು ಯಾರಿಗೆ ಹೆಗಲಾಗಿದೆ? ಜೆಡಿಎಸ್ ಉಪ್ಪು ತಿಂದ ಆ ಮಹಾನ್ ನಾಯ ಕರು ಈ ಪ್ರಶ್ನೆಗಳಿಗೆ ಉತ್ತರ ನೀಡುವರೇ?
ಮಿತ್ರಪಕ್ಷಗಳನ್ನೇ ಆಪೋಷನ ಪಡೆದು ಜೀವಿಸುತ್ತಿರುವ, ಜನರಿಂದ ತಿರಸ್ಕಾರವಾಗಿರುವ, ಇತರ ಪಕ್ಷಗಳೊಂದಿಗೆ ಚೌಕಾಸಿ ಯಲ್ಲಿ ತೊಡಗಿರುವ ಕಾಂಗ್ರೆಸ್ ಭಾರತದಲ್ಲಿ ರಾಜಕೀಯ ಪಕ್ಷವಾಗಿ ಉಳಿದಿದೆಯೇ? ಕಾಂಗ್ರೆಸ್ ತನ್ನ ಅಹಂಕಾರದ ಪ್ರವೃತ್ತಿ ಮುಂದುವರಿಸಿಕೊಂಡು ಹೋದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳುವುದರಲ್ಲಿ ಅನುಮಾನಗಳಿಲ್ಲ. 2018ರ ಚುನಾ ವಣೆಯಲ್ಲಿ `ಮಹಾನ್ ನಾಯಕರ’ `ಅಪ್ಪನಾಣೆ’ `ತಿಪ್ಪರಲಾಗ’ದ ಸವಾಲುಗಳನ್ನು ಜನ ಸೋಲಿಸಿದ್ದಾರೆ. ಆ ಪಕ್ಷ ಅಧಿಕಾರಕ್ಕೆ ಬಾರದು, ಈ ಪಕ್ಷ ಅಧಿಕಾರಕ್ಕೆ ಬಾರದು ಎಂದು `ಅಪ್ಪನಾಣೆ’ ಗಳನ್ನು ಇಟ್ಟವರಿಗೆ ಜನ, ಆಣೆ ಪ್ರಮಾಣದ ಮಹತ್ವ ತಿಳಿಸಿ ಕೊಟ್ಟಿದ್ದಾರೆ. ಈ ಉಪ ಚುನಾವಣೆಯಲ್ಲೂ ಅವರಿಗೆ ತಕ್ಕ ಉತ್ತರ ಸಿಗಲಿದೆ. ಅದಕ್ಕಾಗಿ ಕಾಯಲಿ.